ಕೋವಿಡ್ ತಡೆಯಲು ಇಂದಿನಿಂದ ದೇಶದಾದ್ಯಂತ ಪ್ರಾರಂಭವಾದ ಕೋವಿಶೀಲ್ಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಹೆಸರಾಗಿರುವ ಹುಬ್ಬಳ್ಳಿ ಕಿಮ್ಸ್ ಸೇರಿದಂತೆ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಚಾಲನೆ ದೊರೆಯಿತು. ನವದೆಹಲಿಯ ನಿರ್ಮಾಣ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೋವಿಡ್ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣವನ್ನು ವರ್ಚುವಲ್ ವೇದಿಕೆಯ ಮೂಲಕ ವೀಕ್ಷಿಸಲಾಯಿತು.
ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಕಿಮ್ಸ್ ನಲ್ಲಿ ಏರ್ಪಡಿಸಿದ್ದ ಈ ಚಾರಿತ್ರಿಕ ಮಹತ್ವದ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಕೊರೊನಾ ವಿರುದ್ಧ ಹೋರಾಡಲು ಲಸಿಕಾಕರಣಕ್ಕೆ ಚಾಲನೆ ದೊರೆತಿದೆ. ಕೊರೊನಾ ವೈರಾಣು ಮೊದಲ ಬಾರಿಗೆ ದೇಶದಲ್ಲಿ ಕಾಣಿಸಿಕೊಂಡ ಕೂಡಲೇ ಲಾಕ್ ಡೌನ್ ಮೂಲಕ ಈ ಬೃಹತ್ ದೇಶದಲ್ಲಿ ಜನಜಾಗೃತಿ ಮೂಡಿಸಲಾಯಿತು.ದೇಶದ ವೈದ್ಯಕೀಯ ವಿಜ್ಞಾನಿಗಳು ಈ ಕಾರ್ಯವನ್ನು ಸವಾಲಿನಂತೆ ಸ್ವೀಕರಿಸಿ ಲಸಿಕೆ ಅಭಿವೃದ್ಧಿ ಪಡಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಸಾವಿರ ಕೋವಿಡ್ ಲಸಿಕೆಗಳು ಸ್ವೀಕಾರವಾಗಿವೆ. 25,366 ಸರ್ಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕಾರ್ಯಕರ್ತರನ್ನು ಲಸಿಕಾಕರಣಕ್ಕೆ ಗುರುತಿಸಲಾಗಿದೆ. ಮೊದಲ ದಿನವಾದ ಜಿಲ್ಲೆಯ ಏಳು ಕೇಂದ್ರಗಳಲ್ಲಿ ಸುಮಾರು 560 ಲಸಿಕೆ ನೀಡುವ ಗುರಿ ಇದೆ.ಸೋಮವಾರದಿಂದ ಜಿಲ್ಲೆಯ 70 ಕೇಂದ್ರಗಳಲ್ಲಿ ಲಸಿಕಾಕರಣ ನಡೆಯಲಿದೆ. ಚುನಾವಣೆ ಕರ್ತವ್ಯದ ಮಾದರಿಯಲ್ಲಿ ಅತ್ಯಂತ ಶಿಸ್ತಿನಿಂದ ಈ ಪ್ರಕ್ರಿಯೆ ನಡೆಯಲಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ವಯೋಮಾನದ ವಿವಿಧ ಖಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಲಸಿಕೆ ನೀಡಲಾಗುತ್ತದೆ. ಲಸಿಕೆ ಬಂದ ಬಳಿಕ ಕೋವಿಡ್ ಶೂನ್ಯಕ್ಕೆ ಇಳಿಯುವವರೆಗೂ ಸುರಕ್ಷತಾ ಕ್ರಮಗಳು ಮುಂದುವರೆಯಬೇಕು ಎಂದರು.
ಮೊದಲ ಹಂತದಲ್ಲಿ ಲಸಿಕಾಕರಣಕ್ಕೆ ಪ್ರಥಮ ಫಲಾನುಭವಿಯಾಗಿ ಗುರುತಿಸಿದ ಕಿಮ್ಸ್ ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಗ್ರೂಪ್ ಡಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ ಬಳ್ಳಾರಿ ಹಾಗೂ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ.ನಾರಾಯಣ ಹೆಬಸೂರ ಅವರಿಗೆ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಕೋವುಶೀಲ್ಡ್ ಲಸಿಕೆ ನೀಡಲಾಯಿತು. ಕಳೆದ ಏಳೆಂಟು ತಿಂಗಳುಗಳಿಂದ ನಮ್ಮ ಪ್ರಾಣವನ್ನೂ ಲೆಕ್ಕಿಸದೇ ಕೊರೊನಾ ವಿರುದ್ಧ ಹೋರಾಡಿದ್ದೇವೆ,ಇದೀಗ ಮೊದಲ ಹಂತದಲ್ಲಿಯೇ ಲಸಿಕೆ ನೀಡಲು ,ನಮ್ಮನ್ನು ಗುರುತಿಸಿರುವುದು ಸಂತಸ ತಂದಿದೆ. ಮೊದಲಿಗೆ ಒಂದು ಸಣ್ಣ ಮಟ್ಟದ ಆತಂಕ ಇತ್ತು ಕಿಮ್ಸ್ ವೈದ್ಯರು ತಿಳುವಳಿಕೆ ನೀಡಿ ,ಭರವಸೆ ನೀಡಿದರು.ಲಸಿಕೆ ಪಡೆದು ಅರ್ಧಗಂಟೆಯಾಗಿದೆ ಯಾವುದೇ ಸಮಸ್ಯೆ ಇಲ್ಲ ಆರಾಮವಾಗಿದ್ದೇನೆ.
ಡಾ.ನಾರಾಯಣ ಹೆಬಸೂರ ಅವರು ಮಾತನಾಡಿ ಲಸಿಕೆಯು ಕೊರೊನಾ ತಡೆಯಲು ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಂಪೂರ್ಣ ಪೂರಕವಾಗಿದೆ.ಕರ್ತವ್ಯ ನಿರ್ವಹಿಸುತ್ತಿರುವ ಮಾತೃ ಸಂಸ್ಥೆಯಲ್ಲಿಯೇ ಲಸಿಕೆ ಪಡೆದಿರುವುದು ಹೆಮ್ಮೆ ಮೂಡಿಸಿದೆ.ವೈದ್ಯನಾಗಿ ಸ್ವತಃ ಲಸಿಕೆ ಹಾಕಿಸಿಕೊಂಡಾಗ ಸಾರ್ವಜನಿಕರಲ್ಲಿ ಹೆಚ್ಚು ಜಾಗೃತಿ ಬರಲಿದೆ ಆದ್ದರಿಂದ ಸ್ವ ಇಚ್ಛೆಯಿಂದ ಇಂದು ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವೆ ಎಂದರು.
ಒಟ್ಟಾರೆ ಇಡೀ ದೇಶಾಧ್ಯಂತ ಕೊರೊನಾ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು. ಹುಬ್ಬಳ್ಳಿಯ ಕಿಮ್ಸನಲ್ಲಿಯೂ ಲಸಿಕೆ ನೀಡಲು ಆರಂಭವಾಗಿದ್ದು. ಈ ಭಾಗದ ಜನತೆಗೆ ಸಂತಸ ತಂದಿದೆ.