Chikkodi

ಬಜೆಟ್‍ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನಅನುದಾನದ ನಿರೀಕ್ಷೆ: ಸಚಿವೆ ಶಶಿಕಲಾ ಜೊಲ್ಲೆ

Share

ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರಿಂದ ಮೊದಲ ಹಂತದ ಕಾಮಗಾರಿಗೆ ಅಡಿಗಲ್ಲು
– ಕವಿ ಚನ್ನವೀರ ಕಣವಿ ಅವರ ನಿಧನಕ್ಕೆ ಕಾರ್ಯಕ್ರಮದಲ್ಲಿ ಸಂತಾಪ ಹಾಗೂ ಮೌನಾಚರಣೆ

ಗುಡ್ಡಾಪುರ ಫೆಬ್ರವರಿ 16: ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಸನ್ಮಾನ್ಯ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿದರು.

ಇಂದು ಮಹಾರಾಷ್ಟ್ರ ರಾಜ್ಯದ ಗುಡ್ಡಾಪುರದ ದಾನಮ್ಮ ದೇವಿ ಶ್ರೀ ಕ್ಷೇತ್ರದಲ್ಲಿ ಮೊದಲ ಹಂತದ ಕಾಮಗಾರಿ ಕರ್ನಾಟಕ ಭವನ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಸರಕಾರ ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನ ಹೊಂದಿದೆ. ದೇವಸ್ಥಾನಗಳ ಸಮಗ್ರ ಅಭಿವೃದ್ದಿ ಹಾಗೂ ನಮ್ಮ ರಾಜ್ಯದ ಭಕ್ತಾದಿಗಳಿಗೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರತ್ತ ನಾವು ಗಮನ ನೀಡುತ್ತಿದ್ದೇವೆ ಎಂದರು.

ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನವನ್ನ ಮುಜರಾಯಿ ಇಲಾಖೆಗೆ ನೀಡಲಾಗಿತ್ತು. ಮಾನ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‌ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಇನ್ನೂ ಹೆಚ್ಚಿನ ಅನುದಾನ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದರು.

ಈಗಾಗಲೇ ಶ್ರೀಶೈಲ, ಅಯೋಧ್ಯ, ಪಂಡರಾಪುರ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಗುಡ್ಡಾಪುರ ಶ್ರೀ ಕ್ಷೇತ್ರದಲ್ಲಿ ರಾಜ್ಯದ ಭಕ್ತಾದಿಗಳಿಗೆ ಇನ್ನೂ ಸೌಕರ್ಯ:
ಕರ್ನಾಟಕ ರಾಜ್ಯದ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹರಾಷ್ಟ್ರದ ಶ್ರೀ ದಾನಮ್ಮದೇವಿ ಗುಡ್ಡಾಪುರದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇಂದು ಮೊದಲ ಹಂತದ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮ ನಡೆದಿದೆ. ಗುಡ್ಡಾಪುರಕ್ಕೆ ಕರ್ನಾಟಕ ರಾಜ್ಯದಿಂದ ಅಗಮಿಸುವಂತಹ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ಶ್ರೀ ದೇವಾಲಯದ ಹೆಸರಿನಲ್ಲಿರುವ 2 ಏಕರೆ ಜಮೀನನ್ನು ಖರೀದಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಕ್ತರಿಗೆ ವಿಶಾಲವಾದ ದಾಸೋಹ ಭವನ, ವಾಸ್ತವ್ಯಕ್ಕಾಗಿ ಭವನವನ್ನು ನಿರ್ಮಿಸಲಾಗುವುದು. ಇದು ಮೊದಲ ಹಂತದ ಕಾಮಗಾರಿಯಾಗಿದ್ದು, ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದದಲ್ಲಿ ಭಾಗವಹಿಸಿದ್ದ ಡಾ. ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಕರ್ನಾಟಕ ಸರಕಾರದ ವತಿಯಿಂದ ಮೊದಲ ಹಂತದಲ್ಲಿ 5 ಕೋಟಿ ರೂಪಾಯಿಗಳ ಅನುದಾನ ದೊರಕಿರುವುದು ಬಹಳ ಸಂತಸದ ವಿಷಯ. ಪ್ರಸಿದ್ದ ಪುಣ್ಯ ಕ್ಷೇತ್ರವಾದ ದಾನಮ್ಮ ದೇವಿ ಕ್ಷೇತ್ರ ಅಭಿವೃದ್ದಿಗೆ ಇನ್ನಷ್ಟು ಅನುದಾನ ಶಶಿಕಲಾ ಜೊಲ್ಲೆ ನೀಡಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಕೆಲಸಗಳು ಆಗಲಿ ಎಂದರು.

ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂದೂರಿ, ಜತ್ತ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಕ್ರಮಸಿಂಹ ಸಾವಂತ್‌, ಸಂಸದರಾದ ಸಂಜಯ ಕಾಕಾ ಪಾಟೀಲ್‌, ಶ್ರೀ ದಾನಮ್ಮದೇವಿ ಟ್ರಸ್ಟ್‌ ಕಮಿಟಿಯ ಸದಸ್ಯರು, ಆ ಭಾಗದ ಇತರ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಬಾಕ್ಸ್‌: ಚನ್ನವೀರ ಕಣವಿ ಅವರಿಗೆ ಶ್ರದ್ದಾಂಜಲಿ:
ನಾಡೋಜ ಚನ್ನವೀರ ಕಣವಿ ಅವರ ನಿಧನದಿಂದ ಕನ್ನಡದ ಸಾಹಿತ್ಯ ಲೋಕ ಬಡವಾಗಿದ್ದು, ಹಿರಿಯ ಕೊಂಡಿಯೊಂದು ಕಳಚಿಕೊಂಡಂತಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಸಂತಾಪ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಈ ಬಗ್ಗೆ ದುಖಃ ವ್ಯಕ್ತಪಡಿಸಿ ಮೌನಾಚರಣೆ ನಡೆಸಲಾಯಿತು. ಕಣವಿ ಅವರ ಕುಟುಂಬ, ಅಭಿಮಾನಿಗಳು, ಶಿಷ್ಯಕೋಟಿಗೆ ದುಖಃಭರಿಸುವ ಶಕ್ತಿಯನ್ನು ಭಗವಣತ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

Tags:

error: Content is protected !!