ಹಿಜಾಬ್ ಸೇರಿದಂತೆ ಕೇಸರಿ, ಹಸಿರು ಯಾವುದನ್ನು ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಹೆಣ್ಣುಮಕ್ಕಳ ಮುಗ್ಧತೆಯನ್ನು ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ.

ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು.
ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಶಾಲಾ ಆವರಣದ ಗೇಟ್ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕರಾರಿಲ್ಲ. ಆದರೆ ತರಗತಿಗೆ ಅವಕಾಶವಿಲ್ಲ. ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು.