ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸದ ಅಂಗವಾಗಿ ರಥೋತ್ಸವ ಶನಿವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಯರಗೊಪ್ಪದ ಲೀಲಾಮಠದ ಶ್ರೀ ನಿತ್ಯಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಜರುಗಿದ ರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಯುವ ಸಮುದಾಯ ಕೇಸರಿ ಬಣ್ಣದಲ್ಲಿ ಮಿಂದೆದ್ದರು. ರಥೋತ್ಸವದ ಮಾರ್ಗದುದ್ದಕ್ಕೂ ಪವನಸುತನ ನಾಮಸ್ಮರಣೆ ಹಾಗೂ ಉದ್ಘೋಷ ಮೊಳಗಿದವು. ಶ್ರೀ ನಿತ್ಯಾನಂದ ಸ್ವಾಮಿಗಳು ಮಾತನಾಡಿ, ಇಂದಿನ ತಂತ್ರಜ್ಞಾನದ ಸದ್ಬಳಕೆಗಿಂತ ಕೆಲವು ದುರ್ಬಳಕೆ ಮಾಡುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಯೂರಲು ಕಷ್ಟವಾಗುತ್ತದೆ. ಆದ್ದರಿಂದ ಯುವ ಸಮುದಾಯ ಧಾರ್ಮಿಕ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.ಶತಮಾನದ ಇತಿಹಾಸಯುಳ್ಳ ಭಾರತೀಯ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಕಡೆಗಣಿ, ಇತ್ತಿಚೆಗೆ ಪಾಶ್ಚಿಮಾತ್ಯ ಸಂಸ್ಕೃತಿಯ ಬೆನ್ನು ಬಿದ್ದಿರುವ ಯುವ ಸಮುದಾಯ ನಮ್ಮತನದ ಜೊತೆಗೆ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ತಿಳಿಹೇಳಿದರು.
