ಬೆಂಗಳೂರಿನಲ್ಲಿ ಆರ್ ಸಿ ಬಿವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬೆಂಗಳೂರಿನಲ್ಲಿ ಮೊನ್ನೆ ಆರ್ಸಿಬಿ ವಿಜಯೋತ್ಸವ ನಡೆಸುವ ವೇಳೆ ಕಾಲ್ತುಳಿತ ಉಂಟಾಗಿ 11 ಜನ ಸಾವಿಗೀಡಾಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ. ಬಂದೋಬಸ್ತ್ ಒದಗಿಸಿರಲಿಲ್ಲ. ರಾಜ್ಯ ಸರ್ಕಾರ ಈ ವಿಜಯೋತ್ಸವಕ್ಕೆ ಸರಿಯಾದ ವ್ಯವಸ್ಥೆ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ತನ್ನ ಮೇಲಿರುವ ಆರೋಪ ತಳ್ಳಿ ಹಾಕುವುದಕ್ಕಾಗಿ ರಾಜ್ಯ ಸರ್ಕಾರ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದೆ. ರಾಜ್ಯ ಸರ್ಕಾರವೇ ಈ ದುರಂತದ ಹೊಣೆ ಹೊರಬೇಕು.

ಇಲ್ಲಿ ಅಮಾನತ್ತಾಗಬೇಕಾದವರು ಪೊಲೀಸರಲ್ಲ. ಬದಲಿಗೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದನ್ನು ಬಿಟ್ಟು ರಾಜ್ಯ ಸರ್ಕಾರ ಮಾನ, ಮರ್ಯಾದೆ ಬಿಟ್ಟು ಹಿರಿಯ ಐಪಿಎಸ್ ಅಧಿಕಾರಿಯನ್ನು ಅಮಾನತ್ತು ಮಾಡುವ ಮೂಲಕ ತನ್ನ ದುರಾಡಳಿತ ಪ್ರದರ್ಶಿಸಿದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.