ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿರುವ ಉಡುಪಿ ಕೃಷ್ಣ ಪ್ಯಾಲೆಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಮೂರು ಅಂತಸ್ತಿನ ಈ ಹೊಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿ, ಕೆಲವೇ ಕ್ಷಣಗಳಲ್ಲಿ ಹೊಟೆಲ್ ಕರಕಲಾದ ಸ್ಥಿತಿ ಕಂಡುಬಂದಿದೆ.
ಘಟನೆ ಕುರಿತು ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಆರಿಸುವ ಕಾರ್ಯದಲ್ಲಿ ಸ್ಥಳೀಯರೂ ಸಹಕಾರ ನೀಡಿದರು.
ಪ್ರಾಥಮಿಕ ಮಾಹಿತಿಯಂತೆ, ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಈ ಘಟನೆ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಉಂಟಾದ ನಷ್ಟದ ಅಂದಾಜು ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

