ಬೆಳಗಾವಿ ನಗರದ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಮೋದಗಾ-ಸುಭಾವಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಅಕ್ರಮ ಸರಾಯಿಯನ್ನು ಜಪ್ತಿ ಮಾಡಿದ್ದಾರೆ.

ದಿನಾಂಕ 20/02/2026 ರಂದು ಮೋದಗಾದ ವಿಠಲ ಹಣಬರ ಲೇಔಟ್ ಬಳಿ ಅಕ್ರಮವಾಗಿ ಕಳ್ಳಭಟ್ಟಿ ಸರಾಯಿ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಮಾರಿಹಾಳ ಠಾಣೆಯ ಎಎಸ್ಐ ಜಿ. ಎಸ್. ದರೂರ ಮತ್ತು ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಅಕ್ರಮವಾಗಿ 5 ಲೀಟರ್ನಷ್ಟು ಕಳ್ಳಭಟ್ಟಿ ಸರಾಯಿಯನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆನಂದ ಅಪ್ಪಯ್ಯ ಕಲೇರಿ (25) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ ಅಕ್ರಮ ಸರಾಯಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಸಕಾಲದಲ್ಲಿ ದಾಳಿ ನಡೆಸಿ ಅಕ್ರಮ ತಡೆದ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಶ್ಲಾಘಿಸಿದ್ದಾರೆ.
