ಬಾಗಲಕೋಟೆ ಉಪಚುನಾವಣೆಗೆ ಕಣ ಸಿದ್ಧವಾಗಿದ್ದು, ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ಟಿಕೆಟ್ ಸಿಕ್ಕ ಬೆನ್ನಲ್ಲೇ ಚರಂತಿಮಠ ಅವರು ಚುನಾವಣಾ ರಣತಂತ್ರ ಹಾಗೂ ಪಕ್ಷದ ಒಗ್ಗಟ್ಟಿನ ಕುರಿತು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಬಾಗಲಕೋಟೆ ಉಪಚುನಾವಣೆಯ ಕಣಕ್ಕೆ ಬಿಜೆಪಿ ಹಿರಿಯ ನಾಯಕ ವೀರಣ್ಣ ಚರಂತಿಮಠ ಅವರನ್ನು ಕಣಕ್ಕಿಳಿಸಿದೆ. ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಅವರು, ತಮಗೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಧನ್ಯವಾದ ಅರ್ಪಿಸಿದರು. ಇದೇ ವೇಳೆ ಯುಗಾದಿ ಹಾಗೂ ಹೊಸ ವರ್ಷದ ಶುಭಾಶಯ ಕೋರಿದ ಅವರು, ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಸಿದ್ಧತೆ ಮತ್ತು ಪಕ್ಷದ ಸಂಘಟನಾ ಕಾರ್ಯಗಳು ಚುರುಕಿನಿಂದ ಸಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ ಚರಂತಿಮಠ, ಗೋವಿಂದ ಕಾರಜೋಳ ಹಾಗೂ ಅರುಣ್ ಶಹಾಪುರ ಅವರಿಗೆ ವರಿಷ್ಠರು ಮಹತ್ವದ ಜವಾಬ್ದಾರಿ ನೀಡಿದ್ದಾರೆ ಎಂದರು. ಇದೇ ತಿಂಗಳ 23ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ ಅವರು, ಪ್ರಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಬಾಗಲಕೋಟೆಯಲ್ಲಿ ಹಿಂದುತ್ವ ಮತ್ತು ಬಿಜೆಪಿ ಗೆಲುವೇ ನಮ್ಮ ಗುರಿ ಎಂದು ಅವರು ಈ ಸಂದರ್ಭದಲ್ಲಿ ಗುಡುಗಿದರು.
• ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಚರಂತಿಮಠ ಘೋಷಣೆ
• ಏಪ್ರಿಲ್ 23 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ
• ಪಕ್ಷ ಬಿಟ್ಟವರ ಮನವೊಲಿಕೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್
• ಬಿಜೆಪಿ ಪ್ರಚಾರಕ್ಕೆ ಬರಲಿದ್ದಾರೆ ಬಿ.ಎಸ್. ಯಡಿಯೂರಪ್ಪ
