ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮಾರ್ಚ್ 7 ರಂದು ಬೆಳಗಾವಿ ಟಿಳಕವಾಡಿಯ ಕೆ.ಎಲ್.ಎಸ್ (KLS) ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಅವರು ಉದ್ಘಾಟಿಸಲಿದ್ದಾರೆ. ಅಂದು ಜಿಲ್ಲೆಯ ಸುಮಾರು 1200 ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಪೋಕ್ಸೋ (POCSO), ಬಾಲ್ಯ ವಿವಾಹ ನಿಷೇಧ ಮತ್ತು ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಕಾನೂನು ಅರಿವು ಮೂಡಿಸಲಾಗುವುದು. ಇದಕ್ಕಾಗಿ 65 ನ್ಯಾಯಾಧೀಶರು, ಹಿರಿಯ ನ್ಯಾಯವಾದಿಗಳು ಹಾಗೂ ಸ್ವಯಂಸೇವಕರು ಪ್ರತ್ಯೇಕ ಶಾಲೆಗಳಿಗೆ ಭೇಟಿ ನೀಡಲಿದ್ದಾರೆ.

ಮಾರ್ಚ್ 14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಸುಮಾರು 28,000 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇವುಗಳ ಇತ್ಯರ್ಥಕ್ಕಾಗಿ 85 ಪೀಠಗಳನ್ನು ಸಿದ್ಧಪಡಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ 90 ದಿನಗಳ ಈ ಅಭಿಯಾನದಲ್ಲಿ ವಕೀಲರು ಮಧ್ಯಸ್ಥಿಕೆ ವಹಿಸಿ, ಉಭಯ ಪಕ್ಷಗಳ ನಡುವೆ ರಾಜಿ ಸಂಧಾನದ ಮೂಲಕ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಿದ್ದಾರೆ.
