ಮುಳುಗಡೆ ನಗರಿ ಬಾಗಲಕೋಟೆಗೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಅವರು ಒಂದೇ ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಲು ಆಗಮಿಸಿರುವ ರಾಜ್ಯದ ಈ ಜೋಡೆತ್ತನ್ನು ಸಚಿವ ಆರ್.ಬಿ. ತಿಮ್ಮಾಪೂರ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.


ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿ ಪರ್ವಕ್ಕೆ ಇಂದಿನ ದಿನ ಸಾಕ್ಷಿಯಾಗಲಿದೆ. ಜಿಂದಾಲ್ ಏರ್ಸ್ಟ್ರಿಪ್ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ ಮತ್ತು ಡಿಸಿಎಂ ಅವರನ್ನು ನವನಗರದ ಸೆಕ್ಟರ್ ನಂ. 1 ರಲ್ಲಿ ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪೊಲೀಸ್ ಇಲಾಖೆಯು ಗೌರವ ವಂದನೆ ಸಲ್ಲಿಸಿತು.

ನವನಗರದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ, ಜಿಲ್ಲೆಯ ಬಹುದಿನಗಳ ಕನಸಾದ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿದಂತೆ ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವ ಆರ್.ಬಿ. ತಿಮ್ಮಾಪೂರ್, ಜಿಲ್ಲೆಯ ಶಾಸಕರು ಮತ್ತು ಮಾಜಿ ಸಚಿವರು ಭಾಗಿಯಾಗಿದ್ದು, ಅಭಿವೃದ್ಧಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
