ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಮಹಿಳಾ ಅಧಿಕಾರಿಗಳ ಮತ್ತು ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರು ಚಾಲನೆ ನೀಡಿದರು.

ಪ್ರತಿಯೊಬ್ಬರೂ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು, ನಾನು ಅರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತೇನೆ. ಕಳೆದ 25 ವರ್ಷಗಳಿಂದ ನಿರಂತರವಾಗಿ ಯೋಗ, ಏರೋಬಿಕ್ಸ್ ಮಾಡಿಕೊಂಡು ಬರುತಿದ್ದೇನೆ. ನಾನು ಇದುವರೆಗೂ 19 ಯೋಗ ಶಿಬಿರಗಳಲ್ಲಿ ಪಾಲ್ಗೊಂಡಿದ್ದು, ಈ ಪೈಕಿ ರಾಮದೇವ್ ಬಾಬಾ ಅವರ 11 ಯೋಗ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಯಸ್ಸಿಗಿಂತ ಆರೋಗ್ಯವೇ ನಮಗೆ ಮುಖ್ಯ. ವಯಸ್ಸಾದಾಗ ನಮ್ಮನ್ನು ಮಕ್ಕಳು, ನೋಡಿಕೊಳ್ಳುತ್ತಾರೆ ಅಂತ ನಾವು ಕೂರಬಾರದು. ಆದರೆ ಇಂದು ಆ ದೃಷ್ಟಿಕೋನವೇ ಬದಲಾಗಿದೆ. ನಾವು ಸದೃಢವಾಗಿ ಇರುವವರೆಗೂ ನಮ್ಮನ್ನು ಎಲ್ಲರೂ ನೋಡಿಕೊಳ್ಳುತ್ತಾರೆ. ಆದರೆ, ನಾವು ಅವರಿಗೆ ಭಾರ ಆದಾಗ ನಮ್ಮನ್ನು ನೋಡಿಕೊಳ್ಳಲು ಬೇಜಾರು ಮಾಡುತ್ತಾರೆ. ಹೀಗಾಗಿ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ಸದಾ ಒತ್ತಡದಿಂದ ಕಾರ್ಯನಿರ್ವಹಿಸುವ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಇಂತಹ ಕ್ರೀಡಾಸ್ಪರ್ಧೆಗಳು ದೈಹಿಕ ಕ್ಷಮತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ ಹಾಗೂ ಬೌದ್ಧಿಕ ಮಟ್ಟ ವೃದ್ಧಿ ಆಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂಬುದೇ ನನ್ನ ಆಶಯ ಎಂದು ತಿಳಿಸಿದರು.
* ಹೆಚ್ಚು ಸೂರ್ಯ ನಮಸ್ಕಾರ ಮಾಡಿದವರಿಗೆ ಬಹುಮಾನ
ಕ್ರೀಡಾಕೂಟದ ವೇಳೆ ಅತಿ ಹೆಚ್ಚು ಸೂರ್ಯ ನಮಸ್ಕಾರ ಮಾಡುವ ಇಲಾಖೆಯ ಸಿಬ್ಬಂದಿಗೆ ಸಚಿವರು 25 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
* ಬ್ಯಾಟಿಂಗ್, ಬೌಲಿಂಗ್ ಮಾಡಿದ ಸಚಿವರು
ಮಹಿಳಾ ಸಿಬ್ಬಂದಿ ವರ್ಗದವರಿಗೆ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಇಲಾಖೆಯ ಸಿಬ್ಬಂದಿಯೊಬ್ಬರನ್ನು ಬೌಲ್ಡ್ ಮಾಡುವ ಮೂಲಕ ಸಚಿವರು ಗಮನ ಸೆಳೆದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಎಂ.ಜಿ.ಪಾಲಿ, ವಾಸಂತಿ ಉಪ್ಪಾರ್ ಸೇರಿದಂತೆ ಇಲಾಖೆಯ ಉಪ ನಿರ್ದೇಶಕರು, ಸಿಡಿಪಿಒಗಳು ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
