Dharwad

ಧಾರವಾಡ: ಇಸ್ಮಾಯಿಲ್ ತಮಟಗಾರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು

Share

ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಿರುದ್ಧ ಇದೀಗ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ಏಪ್ರಿಲ್ 7 ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ಲವ್ ಜಿಹಾದ್ ವಿರುದ್ಧ ‘ಜನಾಕ್ರೋಶ ಪ್ರತಿಭಟನೆ’ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಮುಸ್ಲಿಂ ಸಮುದಾಯವನ್ನು ಅವಮಾನಿಸಿದ್ದಾರೆ ಮತ್ತು ಈ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ಆರೋಪಿಸಿ ಇಸ್ಮಾಯಿಲ್ ತಮಟಗಾರ ಈ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡುವ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಸೂಲಿಬೆಲೆ ಅವರ ವಿರುದ್ಧ ಅತ್ಯಂತ ಕೆಟ್ಟ ಪದಬಳಕೆ ಮಾಡಿ ನಿಂದಿಸಿದ್ದರು.

ಇದೀಗ ಈ ವಿಷಯವನ್ನೇ ಗಂಭೀರವಾಗಿ ಪರಿಗಣಿಸಿರುವ ಹಿಂದೂಪರ ಸಂಘಟನೆಗಳು, ತಮಟಗಾರ ವಿರುದ್ಧ ತಿರುಗಿಬಿದ್ದಿವೆ. “ನಾವು ರಸ್ತೆಯಲ್ಲಿ ಕಾರ್ಯಕ್ರಮ ನಡೆಸಲು ಕಾನೂನುಬದ್ಧವಾಗಿ ಅನುಮತಿ ಪಡೆದಿದ್ದೆವು. ಆದರೆ ಇಸ್ಮಾಯಿಲ್ ತಮಟಗಾರ ಅವರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರ ವಿರುದ್ಧ ಅವಾಚ್ಯ ಶಬ್ದ ಬಳಸುವ ಮೂಲಕ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ” ಎಂದು ಮುಖಂಡರು ಕಿಡಿಕಾರಿದ್ದಾರೆ.
ತಕ್ಷಣವೇ ತಮಟಗಾರ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು, ಇಲ್ಲವಾದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!