ಅಥಣಿ:ಹಿಪ್ಪರಗಿ ಜಲಾನಯನ ಪ್ರದೇಶದಲ್ಲಿ ನದಿ ಪಾತ್ರದ ಖಾಸಗಿ ಭೂಮಿಗಳನ್ನು ಸರ್ಕಾರ ಒತ್ತುವರಿ ಮಾಡಿಕೊಂಡು, ಭೂ ಮಾಲೀಕರಿಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಭೂಮಿಗಳ ಜವಾಬ್ದಾರಿಯನ್ನು ಕರ್ನಾಟಕ ನೀರಾವರಿ ನಿಗಮಕ್ಕೆ ವಹಿಸಲಾಗಿದೆ. ಆದರೆ ಸ್ಥಳೀಯರ ಪ್ರಕಾರ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿದೆ.

ಕಳೆದ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಸಾಗಾಟ ನಡೆದಿರುವ ಬಗ್ಗೆ ನಿರಂತರ ವರದಿಗಳು ಪ್ರಕಟವಾಗುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಕೇವಲ ಕಾಟಾಚಾರದ ಭೇಟಿ ನೀಡಿ ಕೈ ತೊಳೆದುಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ಸ್ಥಳ ಪರಿಶೀಲನೆ ನಡೆಸುವುದು ಮಾತ್ರ ಸಮಸ್ಯೆಗೆ ಪರಿಹಾರವಲ್ಲ; ಅಕ್ರಮ ಚಟುವಟಿಕೆ ತಡೆದು, ಭೂಮಾಲೀಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸ್ಪಷ್ಟ ಕ್ರಮ ಅಗತ್ಯವಾಗಿದೆ. ಅಧಿಕಾರಿಗಳ ಈ ಔಪಚಾರಿಕ ಭೇಟಿಗಳಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆಯೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

