ಖಾನಾಪೂರದ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಸಭೆ ಹಾಗೂ ಉದ್ಯೋಗ ಮೇಳವು ಅತ್ಯಂತ ಉತ್ಸಾಹದಿಂದ ಜರುಗಿತು. ಶಾಸಕರು ಹಾಗೂ ಸಿಡಿಸಿ ಸಮಿತಿಯ ಅಧ್ಯಕ್ಷರೂ ಆಗಿರುವ ವಿಠ್ಠಲ ಹಲಗೇಕರ ಅವರು ವಿಶೇಷ ಆಸಕ್ತಿ ವಹಿಸಿ ಈ ಶಿಬಿರಕ್ಕೆ ಮಾರ್ಗದರ್ಶನ ನೀಡಿದರು.


ಈ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಪಾಲ್ಗೊಂಡಿದ್ದರು. ಬೆಂಗಳೂರು, ಪುಣೆ ಹಾಗೂ ಹುಬ್ಬಳ್ಳಿಯಂತಹ ನಗರಗಳಿಂದ ಸುಮಾರು ಇಪ್ಪತ್ತು ಕಂಪನಿಗಳು ಭಾಗವಹಿಸಿ, ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಗಳಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟವು.

ನಂತರ ಶಾಸಕ ವಿಠ್ಠಲ ಹಲಗೇಕರ ಅವರ ಅಧ್ಯಕ್ಷತೆಯಲ್ಲಿ ಸಿಡಿಸಿ ಸಮಿತಿಯ ಮಹತ್ವದ ಸಭೆ ನಡೆಯಿತು. ಮಹಾವಿದ್ಯಾಲಯದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಹಾಗೂ ಸಿಡಿಸಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
