• ಸಿಎಂರಿಂದ ಕರ್ನಾಟಕ ಪ್ರಗತಿ ಪೋರ್ಟಲ್ ಬಿಡುಗಡೆ
• ಅಭಿವೃದ್ಧಿ ಯೋಜನೆಗಳಿಗೆ ಸಿಗಲಿದೆ ಡಿಜಿಟಲ್ ಸ್ಪರ್ಶ
• ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನೆ
• ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ಸಿಗಲಿದೆ ವೇಗ

ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಇನ್ಮುಂದೆ ಸಿಗಲಿದೆ ಡಿಜಿಟಲ್ ವೇಗ. ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ‘ಕರ್ನಾಟಕ ಪ್ರಗತಿ ಪೋರ್ಟಲ್’ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ತಂತ್ರಜ್ಞಾನ ಯೋಜನೆಗಳ ಪರಿಶೀಲನೆ ಹಾಗೂ ಸಮನ್ವಯಕ್ಕಾಗಿ ನೂತನ ‘ಕರ್ನಾಟಕ ಪ್ರಗತಿ ಪೋರ್ಟಲ್’ ಮತ್ತು ಮಾರ್ಗದರ್ಶಿ ‘ಕೈಪಿಡಿ’ಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸುದೀರ್ಘ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ ಬಿಟ್ಟು ಪಾರದರ್ಶಕತೆಗೆ ಒತ್ತು ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಅನುಮೋದನೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಉದ್ದೇಶದಿಂದ ಈ ಡಿಜಿಟಲ್ ವೇದಿಕೆಯನ್ನು ರೂಪಿಸಲಾಗಿದ್ದು, ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳು ಶೀಘ್ರವಾಗಿ ತಲುಪುವಂತೆ ಮಾಡಲು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ತಾಕೀತು ಮಾಡಿದರು.

