ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ಸವದತ್ತಿ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ವಿವಿಧ ಇಲಾಖೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.
ತಾಲೂಕಿನ ಉಗರಗೋಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಯಲ್ಲಮ್ಮ ತಾಂಡೆ ಗ್ರಾಮದಲ್ಲಿ 2025-26ನೇ ಸಾಲಿನ CMIDP ಯೋಜನೆಯಡಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ “ಯಲ್ಲಮ್ಮಗುಡ್ಡ/ಉಗರಗೋಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ”ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಮಾಡಿ ಸಾವ೯ಜನಿಕರಿಗೆ ಶುದ್ದ ಕುಡಿಯುವ ನೀರನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಫಲಾನುಭವಿಗಳೊಂದಿಗೆ ಚರ್ಚೆ:
“ಬುದ್ಧ,-ಬಸವ-ಅಂಬೇಡ್ಕರ್ ನಿವೇಶನ ಹಂಚಿಕೆ ಯೋಜನೆ”ಯಡಿ ಬಡಾವಣೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಯೋಜನೆಯ ಫಲಾನುಭವಿಗಳಾದ ಸುಡುಗಾಡು ಸಿದ್ದ ಸಮುದಾಯದ ಜನರ ಕುಂದುಕೊರತೆಗಳನ್ನು ಜಿಪಂ ಸಿಇಒ ರವರು ಆಲಿಸಿದರು. ಸ್ಥಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಗತಿ ಪರಿಶೀಲನಾ ಸಭೆ:
ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಆಡಳಿತ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಭೆಯಲ್ಲಿ ಮಾತನಾಡಿದ ಅವರು, ಮಳೆ ವಿಳಂಬವಾಗಿರುವುದರಿಂದ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು. ಕಡ್ಡಾಯವಾಗಿ ನೀರಿನ ಗುಣಮಟ್ಟದ ಪರೀಕ್ಷೆ ಮಾಡಬೇಕು ಎಂದು ಸೂಚನೆ ನೀಡಿದರು.
ನೋಡಲ್ ಅಧಿಕಾರಿಗಳು ವಾರಕ್ಕೊಂದು ಬಾರಿ ವಸತಿ ನಿಲಯಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಆರೋಗ್ಯ ಇಲಾಖೆಯವರು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಬೇಕು. ಜೆಜೆಎಂ ಕಾಮಗಾರಿಗಳನ್ನು ಸೂಕ್ತರೀತಿಯಲ್ಲಿ ನಿರ್ವಹಣೆ ಮಾಡಬೇಕು. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯದಲ್ಲಿ ಕಚೇರಿಗೆ ಹಾಜರಿರಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಬಿ.ವಿ. ಅಯ್ಯನಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ತಾಪಂ ಸಹಾಯಕ ನಿರ್ದೇಶಕ ಆರ್.ಎ. ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಎಲ್ಲ ಗ್ರಾಪಂಗಳ ಆಡಳಿತಾಧಿಕಾರಿಗಳು ಹಾಜರಿದ್ದರು
