ಚಿಕ್ಕೋಡಿ:ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಸುಮಾರು 6 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ಪ್ರವಾಹದ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಪ್ರಸ್ತುತ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 90 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ನದಿಗಳಲ್ಲಿ ಜಲಮಟ್ಟ ಗಣನೀಯವಾಗಿ ಹೆಚ್ಚುತ್ತಿದೆ.
ನದಿಗಳಲ್ಲಿ ನೀರು ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೆಳಹಂತದ ಪ್ರಮುಖ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಇದರಿಂದಾಗಿ ಹಲವು ಗ್ರಾಮಗಳ ನಡುವಿನ ನೇರ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸವಾರರು ಮತ್ತು ಸ್ಥಳೀಯರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
