ಬಾಗಲಕೋಟೆ ಜಿಲ್ಲೆಯಲ್ಲಿ ಸದ್ಯಕ್ಕೆ ಮಳೆಯ ಆರ್ಭಟ ಇಲ್ಲದಿದ್ದರೂ, ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಜಿಲ್ಲೆಯ ಮೂರು ಪ್ರಮುಖ ನದಿಗಳು ಭೋರ್ಗರೆದು ಹರಿಯುತ್ತಿವೆ. ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಿಲ್ಲೆಯ ರೈತ ವಲಯದಲ್ಲಿ ಭಾರಿ ಸಂತಸ ಮೂಡಿಸಿದೆ.


ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜಾಪುರ ಬ್ಯಾರೇಜ್ನ ಹೊರಹರಿವು ಬರೋಬ್ಬರಿ 98 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿದೆ. ಇದರಿಂದಾಗಿ ಹಿಪ್ಪರಗಿ ಬ್ಯಾರೇಜ್ಗೆ ಭಾರಿ ಪ್ರಮಾಣದ ನೀರು ಬರುತ್ತಿದ್ದು, ಅಲ್ಲಿಂದ 84 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇತ್ತ ಘಟಪ್ರಭಾ ನದಿಯಲ್ಲೂ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದ್ದು, ಹಿಡಕಲ್ ಜಲಾಶಯದಿಂದ 21 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇಷ್ಟೇ ಅಲ್ಲದೆ ಮಲಪ್ರಭಾ ನದಿಗೂ ಅಪಾರ ಪ್ರಮಾಣದ ನೀರು ಬಂದು ಸೇರುತ್ತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ತಿಮ್ಮಾಪುರ ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಎರಡು ದಿನಗಳಿಂದ ಜಲವೈಭವ ಕಾಣಿಸಿಕೊಂಡಿದ್ದು, ಜಿಲ್ಲೆಯನ್ನು ಕಾಡುತ್ತಿದ್ದ ಬರದ ಛಾಯೆ ಸಂಪೂರ್ಣವಾಗಿ ದೂರಾಗಿದೆ. ಸ್ಥಳೀಯವಾಗಿ ಮಳೆ ಇಲ್ಲದಿದ್ದರೂ ನದಿಗಳು ತುಂಬಿ ಹರಿಯುತ್ತಿರುವುದು ಕೃಷ್ಣಾ ಹಾಗೂ ಘಟಪ್ರಭಾ ನದಿ ಪಾತ್ರದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
