ಖಾನಾಪುರ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ಗಾಳಿ ಮಳೆಯ ಆರ್ಭಟ ಜೋರಾಗಿದ್ದು, ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪಾರಿಶ್ವಾಡ ಕ್ರಾಸ್ ಬಳಿ ಭಾರಿ ಗಾಳಿಗೆ ಮರವೊಂದು ಬಿದ್ದ ಪರಿಣಾಮ ವಿದ್ಯುತ್ ಕಂಬ ಧರೆಗುರುಳಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಖಾನಾಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಮುಖ್ಯ ರಸ್ತೆ ಹಾಗೂ ಹಳೆಯ ಚಿಕ್ಕ-ದೊಡ್ಡ ರಸ್ತೆಗಳ ಬದಿಯಲ್ಲಿರುವ ಒಣಗಿದ ಮತ್ತು ಹಳೆಯ ಮರಗಳು ಭಾರಿ ಗಾಳಿಗೆ ಬುಡಮೇಲಾಗಿ ರಸ್ತೆಗೆ ಉರುಳುತ್ತಿರುವುದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಆತಂಕದಲ್ಲೇ ಸಂಚರಿಸುವಂತಾಗಿದೆ. ಪಾರಿಶ್ವಾಡ ಕ್ರಾಸ್ ಬಳಿ ಮರ ಬಿದ್ದ ಪರಿಣಾಮ ಕೇವಲ ವಿದ್ಯುತ್ ಸಂಪರ್ಕ ಮಾತ್ರವಲ್ಲದೆ, ಕೆಲಕಾಲ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತವು ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
