ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಗಡಿಭಾಗದಲ್ಲಿರುವ ಕೃಷ್ಣಾ ,ದೂಧಗಂಗಾ,ವೇದಗಂಗಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಕಳೆದ ಕೆಲವು ಗಂಟೆಗಳಲ್ಲಿ ನದಿಯ ನೀರು ಸುಮಾರು 2 ಅಡಿಯಷ್ಟು ಹೆಚ್ಚಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ.

ಪ್ರಸ್ತುತ ಮಹಾರಾಷ್ಟ್ರದ ನದಿಗಳಿಂದ ಕೃಷ್ಣಾ ನದಿಗೆ ಸುಮಾರು 87,000 ಕ್ಯೂಸೆಕ ನೀರು ಹರಿದು ಬರುತ್ತಿದೆ. ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯ ಒಳ ಹರಿವು ಹೆಚ್ಚಾಗುತ್ತಿದೆ.ನದಿ ತೀರದ ಕೆಳಮಟ್ಟದ ಎಲ್ಲ ಸೇತುವೆಗಳು ಜಲಾವೃತಗೊಂಡಿವೆ.
ನದಿಯ ನೀರಿನ ಮಟ್ಟ ದಿಢೀರ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನದಿ ತೀರಕ್ಕೆ ಸಾರ್ವಜನಿಕರು ಹಾಗೂ ಜನಜಾನುವಾರುಗಳು ತೆರಳದಂತೆ ತಡೆಯಲು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ.
ನದಿಯ ಹತ್ತಿರ ಯಾರೂ ಹೋಗಬಾರದು ಮತ್ತು ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯಬಾರದು ಎಂದು ತಾಲೂಕಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
