ನೆರೆ ರಾಜ್ಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು,ಚಿಕ್ಕೋಡಿ-ನಿಪ್ಪಾಣಿ ತಾಲೂಕಿನಲ್ಲಿ ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿಗಳಲ್ಲಿ ನೀರಿನ ಮಟ್ಟ ದಿಢೀರ್ ಹೆಚ್ಚಳವಾಗಿದೆ. ಕಳೆದ ಕೆಲವು ಗಂಟೆಗಳಲ್ಲಿ ನದಿಗಳ ನೀರಿನ ಮಟ್ಟ ಬರೋಬ್ಬರಿ 2 ಅಡಿಯಷ್ಟು ಏರಿಕೆಯಾಗಿದ್ದು,ನದಿ ತೀರದ ಜನರಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.


ಮಹಾರಾಷ್ಟ್ರದ ವಿವಿಧ ಜಲಾಶಯ ಹಾಗೂ ನದಿಗಳಿಂದ ಕಲ್ಲೋಳ ಬಳಿಯ ಕೃಷ್ಣಾ ನದಿಗೆ ಪ್ರಸ್ತುತ 65,000 ಕ್ಯೂಸೆಕ್ ಬೃಹತ್ ಪ್ರಮಾಣದ ನೀರು ಹರಿದುಬರುತ್ತಿದೆ. ಕ್ಷಣಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.
ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಒಟ್ಟು 5 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ ಇದರಿಂದಾಗಿ ಹಲವು ಗ್ರಾಮಗಳ ನಡುವಿನ ನೇರ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.
ಯಡೂರ – ಕಲ್ಲೋಳ ಸೇತುವೆ,ಬಾವನ ಸೌಂದತ್ತಿ – ಮಾಂಜರಿ,ಬಾರವಾಡ – ಕುನ್ನೂರ,ಕಾರದಗಾ – ಭೋಜ,ಭೋಜ – ಶಿವಾಪೂರವಾಡಿ ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿರುವುದರಿಂದ ವಾಹನ ಸವಾರರು ಹಾಗೂ ಸ್ಥಳೀಯ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
