“ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಂಬೈನ ವಿಧಾನಸೌಧದಲ್ಲಿ ಇಂದು ಮಹತ್ವದ ಉನ್ನತ ಮಟ್ಟದ ಸಭೆ ಆರಂಭವಾಗಿದೆ. ಶರದ್ ಪವಾರ್, ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಸೇರಿದಂತೆ ಹಲವು ಘಟಾನುಘಟಿ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದು, ಗಡಿ ವಿಚಾರದಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಗಂಭೀರ ಚರ್ಚೆ ನಡೆಸುತ್ತಿದ್ದಾರೆ.”

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಮಧ್ಯಾಹ್ನ ಮುಂಬೈನ ವಿಧಾನಸೌಧದಲ್ಲಿ ಉನ್ನತಾಧಿಕಾರ ಸಮಿತಿಯ ಮಹತ್ವದ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯದ ಹಿರಿಯ ಸಚಿವರು, ಜನಪ್ರತಿನಿಧಿಗಳು ಹಾಗೂ ಗಡಿ ವಿವಾದಕ್ಕೆ ಸಂಬಂಧಿಸಿದ ಪ್ರಮುಖ ನಾಯಕರು ಉಪಸ್ಥಿತರಿದ್ದಾರೆ. ಗಡಿ ವಿವಾದದ ಕುರಿತು ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕಾರ್ಯತಂತ್ರವನ್ನು ರೂಪಿಸುವ ನಿಟ್ಟಿನಲ್ಲಿ ಈ ಸಭೆ ತೀವ್ರ ಕುತೂಹಲ ಮೂಡಿಸಿದೆ.
ಸಭೆಗೂ ಮುನ್ನ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ವಿಧಾನಸೌಧಕ್ಕೆ ಆಗಮಿಸಿದ್ದರು. ತದನಂತರ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ, ಕೇಂದ್ರ ಸಚಿವ ನಾರಾಯಣ ರಾಣೆ, ಸಚಿವ ಹಸನ್ ಮುಶ್ರೀಫ್, ಶಾಸಕ ಶಿವಾಜಿ ಪಾಟೀಲ್ ಹಾಗೂ ಸುನೇತ್ರಾ ಪವಾರ್ ಸೇರಿದಂತೆ ಹಲವು ಗಣ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸದ್ಯ ಉನ್ನತ ಮಟ್ಟದ ಸಭೆ ಮುಂದುವರಿದಿದ್ದು, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಯಾವ ಹೊಸ ರಣತಂತ್ರ ಹೆಣೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
