ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಉದ್ಯಮಿ ಮಾಣಿಕ ವಡಗಾಂವೆ ಅವರಿಗೆ ಸೇರಿದ ‘ಸಮೃದ್ಧಿ ಪ್ಲಾಸ್ಟಿಕ್ ಮತ್ತು ಪಿಯುಸಿ ಪೈಪ್ಸ್’ ಅಂಗಡಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಯಕ್ಸಂಬಾ ಪಟ್ಟಣದಲ್ಲಿ ಮಾಣಿಕ ವಡಗಾಂವೆ ಅವರ ಸಮೃದ್ಧಿ ಪ್ಲಾಸ್ಟಿಕ್ ಅಂಗಡಿಯಲ್ಲಿ ಕಾರಣಗಳಿಂದಾಗಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಸಾಮಗ್ರಿಗಳು ಹಾಗೂ ಪಿಯುಸಿ ಪೈಪ್ಗಳು ಶೀಘ್ರವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಾಗಿದ್ದರಿಂದ, ನೋಡನೋಡುತ್ತಿದ್ದಂತೆಯೇ ಬೆಂಕಿ ರೌದ್ರಾವತಾರ ತಾಳಿದೆ.ಕ್ಷಣಾರ್ಧದಲ್ಲಿ ಇಡೀ ಅಂಗಡಿಯನ್ನು ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಆವರಿಸಿಕೊಂಡವು.
ಅಂಗಡಿಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಮಾಲೀಕರಿಗೆ ಹಾಗೂ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ಸಹಾಯದೊಂದಿಗೆ ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು.
ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಪಿಯುಸಿ ಪೈಪ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಭಾರಿ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ
