“ಬಾಗಲಕೋಟೆಯಲ್ಲಿ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮಮಂದಿರದ ಕಾಣಿಕೆ ಹಣ ದುರುಪಯೋಗ ಪ್ರಕರಣ ಹಾಗೂ ಪಥಸಂಚಲನದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ಗೆ ಕಡಕ್ ಸವಾಲು ಎಸೆದಿದ್ದಾರೆ.”

ಪಥಸಂಚಲನಕ್ಕೆ ಅನುಮತಿ ಪಡೆಯುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ದೊಡ್ಡವರ ಮಕ್ಕಳಿಗೆ ಎಲ್ಲವೂ ನಿರಾಯಾಸವಾಗಿ ಸಿಕ್ಕಿಬಿಡುತ್ತದೆ, ಅವರಿಗೆ ಒಳ್ಳೆಯದು ಮತ್ತು ಕೆಟ್ಟದ್ದರ ಅರಿವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಬಿಜೆಪಿ ಮತ್ತು ಆರ್ಎಸ್ಎಸ್ ಬಗ್ಗೆ ಮಾತನಾಡದಿದ್ದರೆ ನಿದ್ದೆಯೇ ಬರುವುದಿಲ್ಲ. ದೇಶದ್ರೋಹಿ ಸಂಘಟನೆಗಳ ಬಗ್ಗೆ ಮಾತನಾಡದ ಕಾಂಗ್ರೆಸ್ನ ಪಾಪದ ಕೂಸೇ ಪಾಕಿಸ್ತಾನ ಎಂದು ಅವರು ತೀವ್ರವಾಗಿ ಟೀಕಿಸಿದರು.
ಇದೇ ವೇಳೆ ಅಯೋಧ್ಯೆ ರಾಮಮಂದಿರದ ಕಾಣಿಕೆ ಹಣ ದುರುಪಯೋಗದ ಕುರಿತು ಮಾತನಾಡಿದ ಅವರು, ಟ್ರಸ್ಟ್ ನೀಡಿದ ದೂರಿನನ್ವಯ ಈಗಾಗಲೇ ಎಸ್ಐಟಿ ರಚನೆಯಾಗಿದ್ದು, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು. ರಾಮಮಂದಿರ ವಿರೋಧಿಸಿದವರು ಈಗ ಈ ಘಟನೆಯನ್ನು ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ಗೆ ತಾಕತ್ತಿದ್ದರೆ, ದೇಶದ ಅಕ್ರಮ ಮದರಸಾಗಳ ತೆರವು ಹಾಗೂ ಕಾಶಿ-ಮಥುರಾ ಮುಕ್ತಗೊಳಿಸುವ ಕುರಿತು ಎಐಸಿಸಿಯಲ್ಲಿ ಧೈರ್ಯವಾಗಿ ನಿರ್ಣಯ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
