ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರದ ಬಾಲಕರ ವಸತಿ ಶಾಲೆಯಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಭಿಜಿತ್ ಸಮಗಾರ್ (17) ಎಂದು ಗುರುತಿಸಲಾಗಿದೆ. ಹಾಸ್ಟೆಲ್ ಕೊಠಡಿಯೊಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಘಟನೆಗೂ ಮುನ್ನ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟಿದ್ದು, “ನಾನು ಆತ್ಮಹತ್ಯೆ ಯಾಕೆ ಮಾಡಿಕೊಳ್ಳುತ್ತಿದ್ದೇನೆ ಎಂಬುದನ್ನು ವಾಟ್ಸಾಪ್ನಲ್ಲಿ ಹಂಚಿಕೊಂಡಿದ್ದೇನೆ. ಸಂಬಂಧಿಕರಿ ಗೂ ಕಳುಹಿಸಿದ್ದೇನೆ” ಎಂದು ಉಲ್ಲೇಖಿಸಿದ್ದಾನೆ. ಜೊತೆಗೆ ತಂದೆ, ತಾಯಿ ಹಾಗೂ ಅಣ್ಣಂದಿರ ಮೊಬೈಲ್ ಸಂಖ್ಯೆಗಳನ್ನೂ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಕೆಲ ದಿನಗಳಿಂದ ಮಾನಸಿಕವಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಇಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
