ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವುದು ನಿಶ್ಚಿತವಾಗಿದ್ದು, ಇದರಿಂದ ಖಾತೆಗಳ ನಿರ್ವಹಣೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಹುಲ್ ಗಾಂಧಿ ಭೇಟಿಗೂ ಸಂಪುಟ ವಿಸ್ತರಣೆ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಒಟ್ಟಿಗೆ 20 ಜನರಿಗೆ ಸಚಿವ ಸ್ಥಾನ ನೀಡುತ್ತಾರೋ ಅಥವಾ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಯನ್ನು ಒಟ್ಟಿಗೇ ಮಾಡುತ್ತಾರೋ ಎಂಬ ಬಗ್ಗೆ ಇನ್ನು ನಿಖರ ಮಾಹಿತಿಯಿಲ್ಲ, ಆದರೆ ಸಂಪುಟ ವಿಸ್ತರಣೆ ಮಾತ್ರ ಗ್ಯಾರಂಟಿ ಎಂದರು. ಇದೇ ಜುಲೈ 24 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಅವರ ಭೇಟಿಗೂ ಸಂಪುಟ ವಿಸ್ತರಣೆ ಪ್ರಕ್ರಿಯೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು ರಾಜ್ಯದ ನೀರಿನ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವರು, ಸದ್ಯಕ್ಕೆ ಯಾವುದೇ ನೀರಿನ ಸಮಸ್ಯೆಯಿಲ್ಲ ಮತ್ತು ಮುಂದಿನ ಜೂನ್ ತಿಂಗಳಿಗಾಗುವಷ್ಟು ಭರಪೂರ ನೀರು ಜಲಾಶಯಕ್ಕೆ ಹರಿದುಬಂದಿದೆ ಎಂದು ಮಾಹಿತಿ ನೀಡಿದರು.

