ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ಆರೋಗ್ಯ ರಕ್ಷಣೆ ಮತ್ತು ಸಮಯಕ್ಕೆ ಸರಿಯಾದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕೆಎಲ್ಇ ಆಸ್ಪತ್ರೆಯ ವೈದ್ಯರ ತಂಡವು ಈ ಶಿಬಿರದಲ್ಲಿ ಪಾಲ್ಗೊಂಡು ಕೈದಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಗಳನ್ನು ವಿತರಿಸಿತು.
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಎಲ್ಲಾ ಕೈದಿಗಳಿಗೆ ಸೂಕ್ತ ವೈದ್ಯಕೀಯ ಆರೈಕೆ ಸಿಗುವಂತೆ ಮಾಡಲು ಹಾಗೂ ಅವರ ಆರೋಗ್ಯ ಹಿತದೃಷ್ಟಿಯಿಂದ ಜೈಲು ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಜೆಎನ್ಎಂಸಿ ಚಾರಿಟೇಬಲ್ ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ರಾಜೇಶ್ ಪವಾರ್, ಡಾ. ಆರ್. ಎಸ್. ಮುಧೋಳ್ ಹಾಗೂ ಕೆಎಲ್ಇ ಆಸ್ಪತ್ರೆಯ ನುರಿತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ತಂಡವು ಜೈಲಿಗೆ ಭೇಟಿ ನೀಡಿ ಕೈದಿಗಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿತು. ಪರಿಶೀಲನೆಯ ನಂತರ ಅಗತ್ಯವಿದ್ದ ಕೈದಿಗಳಿಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ. ಐ. ಪಿ. ಗಡಾದ್ ಹಾಗೂ ಮಾಜಿ ಮೇಯರ್ ವಿಜಯ ಮೋರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜೈಲಿನ ವೈದ್ಯಾಧಿಕಾರಿ ಡಾ. ಸರಸ್ವತಿ, ಕೆಎಲ್ಇ ಚಾರಿಟೇಬಲ್ ಆಸ್ಪತ್ರೆಯ ಪಿಆರ್ಒ ಬಸವರಾಜ, ಹಿಂದಲಗಾ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಜೈಲಿನಲ್ಲಿರುವ ಕೈದಿಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲು ಸಹಕರಿಸಿದ ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಜೈಲು ಆಡಳಿತ ಮಂಡಳಿಗೆ ಆಯೋಜಕರು ಧನ್ಯವಾದ ತಿಳಿಸಿದರು.

