ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ವೇದಿಕೆಯನ್ನು ಶುದ್ಧೀಕರಣಗೊಳಿಸಿದ ಕ್ರಮವನ್ನು ಖಂಡಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಗೋಮೂತ್ರ ಪ್ರೋಕ್ಷಣೆ ಮಾಡಿ ಶುದ್ಧೀಕರಣಗೊಳಿಸಿರುವುದು ತೀವ್ರ ಅವಮಾನಕರ ಸಂಗತಿಯಾಗಿದ್ದು, ಕೃತ್ಯ ಎಸಗಿದವರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಧರಣಿಯಲ್ಲಿ ನಗರ ಮೇಯರ್ ಗಾದೆಪ್ಪ, ಮುಖಂಡ ಮುಂಡರಗಿ ನಾಗರಾಜ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
