ಖಾನಾಪುರ ತಾಲೂಕಿನ ಸುರಪುರ ಕೇರವಾಡದ ಬೈಲೂರ ಹಾಗೂ ಕಕ್ಕೇರಿ ಮಾರ್ಗದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಖಾನಾಪುರ ಶಾಸಕರ ವಿರುದ್ಧ ಕಾಂಗ್ರೆಸ್ ಯುವ ಮುಖಂಡ ರಾಜು ತಳವಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ.

ಖಾನಾಪುರ ತಾಲೂಕಿನ ಬೈಲೂರ-ಕಕ್ಕೇರಿ ಮಾರ್ಗದ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ತಗ್ಗು-ಗುಂಡಿಗಳು ಬಿದ್ದು ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಪ್ರತಿದಿನ ಪ್ರಾಣಭಯದಲ್ಲೇ ಸಂಚರಿಸುವಂತಾಗಿದೆ. ಪ್ರಸ್ತುತ ಶ್ರಾವಣ ಮಾಸ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಸಿದ್ಧ ಬಿಷ್ಟಾದೇವಿ ಜಾತ್ರೆ ಹಾಗೂ ಪ್ರತಿ ಅಮಾವಾಸ್ಯೆಗೆ ಸಾವಿರಾರು ಭಕ್ತರು ಮತ್ತು ಸಾರ್ವಜನಿಕರು ಇದೇ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ. ಇಂತಹ ಪ್ರಮುಖ ರಸ್ತೆಯ ದುರಾವಸ್ಥೆಯನ್ನು ಕಂಡು ಜನರು ಹಿಡಿಶಾಪ ಹಾಕುತ್ತಿದ್ದು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಜು ತಳವಾರ್ ಅವರು ಖಾನಾಪುರ ಶಾಸಕರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಷ್ಟೊಂದು ಜನದಟ್ಟಣೆ ಇರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.
