ಶ್ರಾವಣ ಮಾಸದ ಮೊದಲ ಹಿಂದೂ ಹಬ್ಬ ಹಾಗೂ ನಾಗರ ಆರಾಧನೆಯ ಪ್ರಮುಖ ಹಬ್ಬವಾದ ನಾಗರ ಪಂಚಮಿಯನ್ನು ಬೆಳಗಾವಿ ನಗರದಲ್ಲಿ ಸೋಮವಾರ ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಆಚರಿಸಲಾಯಿತು. ನಗರದ ವಿವಿಧ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಭಕ್ತರು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ತೆರಳಿ ನಾಗರ ಮೂರ್ತಿಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು.


ನಗರದ ಕಪಿಲೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ನಾಗರ ಮೂರ್ತಿಗೆ ಹಾಲೆರೆದು, ಅರಿಶಿನ, ಕುಂಕುಮ, ಹೂವು ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸಿದರು. ನಾಗದೇವರಿಗೆ ಪೂಜೆ ಸಲ್ಲಿಸಿ ಕುಟುಂಬದ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಕಪಿಲೇಶ್ವರ ದೇವಸ್ಥಾನದ ಆವರಣದಲ್ಲಿ ಹಬ್ಬದ ವಾತಾವರಣ ಕಂಡುಬಂದಿದ್ದು, ಬೆಳಗ್ಗೆಯಿಂದಲೇ ಭಕ್ತರ ಓಡಾಟ ಹೆಚ್ಚಾಗಿತ್ತು. ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನಕ್ಕೆ ಆಗಮಿಸಿ ನಾಗರ ಮೂರ್ತಿಗೆ ಪೂಜೆ ಸಲ್ಲಿಸಿದರು. ಮಕ್ಕಳನ್ನೂ ಕರೆದುಕೊಂಡು ಬಂದಿದ್ದ ಕುಟುಂಬಗಳು ನಾಗರ ಪಂಚಮಿ ಆಚರಣೆಯಲ್ಲಿ ಭಾಗವಹಿಸಿದರು.

ಇದೇ ವೇಳೆ ನಗರದ ವಿವಿಧ ದೇವಸ್ಥಾನಗಳ ಆವರಣದಲ್ಲಿರುವ ನಾಗರ ಮೂರ್ತಿಗಳಿಗೂ ಭಕ್ತರು ಹಾಲೆರೆದು ಪೂಜೆ ಸಲ್ಲಿಸಿದರು. ಹಲವರು ಮಣ್ಣಿನಿಂದ ತಯಾರಿಸಲಾದ ನಾಗರ ಮೂರ್ತಿಗಳನ್ನು ಖರೀದಿಸಿ ಮನೆಗೆ ಕೊಂಡೊಯ್ದು, ಮನೆಯಲ್ಲಿಯೇ ವಿಶೇಷ ಪೂಜೆ ನೆರವೇರಿಸಿದರು. ನಾಗರ ಮೂರ್ತಿಗೆ ಹಾಲು, ನೀರು ಅರ್ಪಿಸಿ, ಹೂವು, ಅರಿಶಿನ, ಕುಂಕುಮದಿಂದ ಅಲಂಕರಿಸಿ ಭಕ್ತಿಯಿಂದ ಪೂಜೆ ಮಾಡಿದರು.
ನಾಗರ ಪಂಚಮಿ ಹಿನ್ನೆಲೆಯಲ್ಲಿ ಬೆಳಗಾವಿಯ ಮನೆಗಳಲ್ಲೂ ಹಬ್ಬದ ಸಡಗರ ಕಂಡುಬಂತು. ಮಹಿಳೆಯರು ಬೆಳಗ್ಗೆಯೇ ಮನೆಯ ಸ್ವಚ್ಛತೆ ಮಾಡಿ, ನಾಗದೇವರ ಪೂಜೆಗೆ ಸಿದ್ಧತೆ ಮಾಡಿಕೊಂಡಿದ್ದರು. ವಿವಿಧ ಬಗೆಯ ಉಂಡಿ, ಚೂಡಾ ಸೇರಿದಂತೆ ಸಾಂಪ್ರದಾಯಿಕ ತಿಂಡಿಗಳನ್ನು ತಯಾರಿಸಿ ಕುಟುಂಬದ ಸದಸ್ಯರು ಒಟ್ಟಾಗಿ ಸವಿದರು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಹಬ್ಬದ ಮತ್ತೊಂದು ಪ್ರಮುಖ ಸಂಪ್ರದಾಯವಾದ ಜೋಕಾಲಿ ಆಡುವ ಆಚರಣೆಯೂ ಹಲವು ಮನೆಗಳು ಹಾಗೂ ಪ್ರದೇಶಗಳಲ್ಲಿ ಕಂಡುಬಂತು. ಮನೆಗಳ ಮುಂಭಾಗ, ಅಂಗಳ ಹಾಗೂ ಮರಗಳಿಗೆ ಜೋಕಾಲಿ ಕಟ್ಟಿ ಮಕ್ಕಳು, ಮಹಿಳೆಯರು ಜೋಕಾಲಿ ಆಡಿ ಸಂಭ್ರಮಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಈ ಸಂಪ್ರದಾಯವನ್ನು ನಗರ ಪ್ರದೇಶದಲ್ಲಿಯೂ ಕೆಲವರು ಮುಂದುವರಿಸಿಕೊಂಡು ಬಂದಿರುವುದು ವಿಶೇಷವಾಗಿತ್ತು.
ನಾಗರ ಪಂಚಮಿ ಹಿನ್ನೆಲೆಯಲ್ಲಿ ದೇವಸ್ಥಾನಗಳ ಸುತ್ತಮುತ್ತ ಭಕ್ತರ ಸಂಚಾರ ಹೆಚ್ಚಾಗಿದ್ದರಿಂದ ಬೆಳಗ್ಗೆಯಿಂದಲೇ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಪೂಜೆ ಸಲ್ಲಿಸಿದರು.
ಶ್ರಾವಣ ಮಾಸದ ಆರಂಭದಲ್ಲೇ ಬರುವ ನಾಗರ ಪಂಚಮಿ ಹಬ್ಬವು ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವ ಹೊಂದಿದ್ದು, ನಾಗದೇವತೆಯನ್ನು ಆರಾಧಿಸುವ ಮೂಲಕ ಪ್ರಕೃತಿ ಹಾಗೂ ಜೀವಜಾಲದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸಾರುವ ಹಬ್ಬವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ನಾಗರ ಪಂಚಮಿಯನ್ನು ಸರಳತೆ ಹಾಗೂ ಸಂಪ್ರದಾಯಕ್ಕೆ ಆದ್ಯತೆ ನೀಡಿ ಭಕ್ತಿಭಾವದಿಂದ ಆಚರಿಸಲಾಯಿತು.
