Chikkodi

ಹಿರಿಯ ನಾಗರಿಕನ ನಿಸ್ವಾರ್ಥ ಸೇವೆ: ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿದ ಎಂ. ಎ. ಸಯ್ಯದ್

Share

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಪರದಾಡುತ್ತಿರುವ ಈ ದಿನಗಳಲ್ಲಿ, ಹಿರಿಯ ನಾಗರಿಕರೊಬ್ಬರು ಸ್ವತಃ ಮುಂಚೂಣಿಯಲ್ಲಿ ನಿಂತು ರಸ್ತೆ ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗಿ ಮಾದರಿಯಾಗಿದ್ದಾರೆ.

ಚಿಕ್ಕೋಡಿ-ಕರೋಶಿ ರಸ್ತೆ ಮಾರ್ಗದಲ್ಲಿ ಬಿದ್ದಿದ್ದ ಅಪಾಯಕಾರಿ ರಸ್ತೆ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಭೀತಿ ಎದುರಾಗಿತ್ತು. ಸ್ಥಳೀಯ ಆಡಳಿತದ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಯಾರ ನೆರವಿಗೂ ಕಾಯದೆ ಚಿಕ್ಕೋಡಿಯ ಹಿರಿಯ ನಾಗರಿಕ ಎಂ. ಎ. ಸಯ್ಯದ್ ಅವರೇ ಸಣ್ಣ ಸಣ್ಣ ಕಲ್ಲುಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ.

ಎಂ. ಎ. ಸಯ್ಯದ್ ಅವರು ತಮ್ಮ ವಯಸ್ಸನ್ನೂ ಲೆಕ್ಕಿಸದೆ ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಗಳನ್ನು ಮುಚ್ಚುತ್ತಿರುವ ದೃಶ್ಯವನ್ನು ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿದಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಸಯ್ಯದ್ ಅವರ ಸಮಾಜಮುಖಿ ಕಾರ್ಯಕ್ಕೆ ನೆಟ್ಟಿಗರು ಹಾಗೂ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾಡಬೇಕಿದ್ದ ಕೆಲಸವನ್ನು ಒಬ್ಬ ಹಿರಿಯ ಜೀವ ವಯಸ್ಸಿನ ಹಂಗು ತೊರೆದು ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ನಿಸ್ವಾರ್ಥ ಸೇವೆಯಿಂದ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ,” ಎಂದು ಸ್ಥಳೀಯ ನಾಗರಿಕರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಈ ಘಟನೆಯಾದರೂ ಕಣ್ಣು ಮುಚ್ಚಿ ಕುಳಿತಿರುವ ರಸ್ತೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಲಿ ಮತ್ತು ತಕ್ಷಣವೇ ಉಳಿದ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!