ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ: ತಾಲೂಕಿನ ಟಕ್ಕಳಕಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಶಾಲೆಯಲ್ಲಿ ಎಲ್ಲ ಶಿಕ್ಷಕರು ನಿಯಮಿತವಾಗಿ ಹಾಜರಾಗುತ್ತಿದ್ದಾರೆಯೇ ಎಂದು ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು, ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರ ಕೊರತೆಯಿದೆ ಎಂದು ತಿಳಿಸಿದರು.


ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಮಹೇಶ ಪೋತದಾರ, ಶೀಘ್ರದಲ್ಲೇ ಚಿತ್ರಕಲಾ ಶಿಕ್ಷಕರನ್ನು ನಿಯೋಜಿಸುವುದಾಗಿ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ಟ್ರ್ಯಾಕ್ಸೂಟ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಜಿ.ಕೆ. ವಾಲಿಕಾರ, ವಾರ್ಡನ್ ಶಿವಾಜಿ ಚವ್ಹಾಣ, ಬೀಬಿ ಲಾಲಸಿಂಗಿ, ಎಸ್.ಕೆ. ಯಳಮೇಲಿ, ಕಿಶೋರ ಬಜಂತ್ರಿ, ಶಿವಾನಂದ ಚನಗೊಂಡ, ಸುರೇಖಾ ಚಲವಾದಿ, ಲಕ್ಷ್ಮೀ ಪಿ., ಮಾಲಾಂಬಿ ತುಂಬರಗಿ ಸೇರಿದಂತೆ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.
