ಧರ್ಮಸ್ಥಳ ಸಂಘದ ಮೇಲ್ವಿಚಾರಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ನಡೆದಿದೆ.

ಜಗಳೂರು ಪಟ್ಟಣದ ಇಂದಿರಾ ಬಡಾವಣೆಯ ನಿವಾಸಿ ಎಚ್. ಕುಬೇಂದ್ರ ಕುಮಾರ್ (43) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಮೂರು ವರ್ಷಗಳಿಂದ ಹೊಳಗುಂದಿ ಹಾಗೂ ಭಾವಿಹಳ್ಳಿ ಗ್ರಾಮಗಳಲ್ಲಿ ಧರ್ಮಸ್ಥಳ ಸಂಘದ ಮೇಲ್ವಿಚಾರಕರಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದ ಕುಬೇಂದ್ರ ಕುಮಾರ್, ಒಳಗೆ ಬಾಗಿಲು ಹಾಕಿಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ. ಪಕ್ಕದ ಮನೆಯವರು ಹೊರಗೆ ಹೋಗುವ ಸಂದರ್ಭದಲ್ಲಿ ಕಿಟಕಿಯಿಂದ ಇವರ ಮೃತದೇಹ ನೇತಾಡುತ್ತಿರುವುದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೂವಿನಹಡಗಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
