ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರಾಗಿ ವಿಜಯೇಂದ್ರ ನನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರಾಗಿ ತಮ್ಮನ್ನು (ವಿಜಯೇಂದ್ರನನ್ನು) ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನು ಸ್ವಾಗತ ಮಾಡುತ್ತೇನೆ. ನಾನು ನಾಯಕ ಎಂದು ಹೊರಟಿಲ್ಲ; ನಮ್ಮ ಪಕ್ಷದ ವರಿಷ್ಠರು, ಹಿರಿಯರು ನನ್ನನ್ನು ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಿದ್ದಾರೆ.
ರಾಜ್ಯಾಧ್ಯಕ್ಷನಾಗಿ, ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಒಂಟಿಗಾಲಿನಲ್ಲಿ ನಿಲ್ಲಿಸುವ ಕೆಲಸವನ್ನು ಬೆಂಗಳೂರು- ಮೈಸೂರು ಪಾದಯಾತ್ರೆ ಮೂಲಕ ಯಶಸ್ವಿಯಾಗಿ ಮಾಡಿದ್ದೇವೆ ಎಂದರು. ರಮೇಶ್ ಜಾರಕಿಹೊಳಿ ಅವರ ಬಾಯಲ್ಲಿ ಪಕ್ಷ, ಪಕ್ಷದ ಸಿದ್ಧಾಂತದ ವಿಚಾರ ಬರುತ್ತಿರುವುದು ಒಳ್ಳೆಯ ಬೆಳವಣಿಗೆ ಪಕ್ಷದ ವರಿಷ್ಠರು ಆಶೀರ್ವಾದ ಮಾಡಿ ಜವಾಬ್ದಾರಿ ನೀಡಿದ್ದಾರೆ. “ನಾನು ಜವಾಬ್ದಾರಿಯನ್ನು ನಿರ್ವಹಿಸುವ ಇಚ್ಛೆ ಮತ್ತು ಸಾಮರ್ಥ್ಯ ಎರಡನ್ನೂ ಹೊಂದಿರುವುದರಿಂದ, ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ನಾನು ಅದನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ” ಎಂದು ಹೇಳಿದ್ದರು
ಶಿಕಾರಿಪುರದ ಗೆಲುವು ಕಾಂಗ್ರೆಸ್ ಕೊಡುಗೆ ಎಂಬ ಡಿ.ಕೆ.ಶಿವಕುಮಾರರ ಹೇಳಿಕೆಗೆ ತಿರುಗೇಟು ನೀಡಿಲ್ಲ ಎಂದು ಯತ್ನಾಳ್ ಅವರ ಹೇಳಿಕೆ ಕುರಿತು ಪತ್ರಕರ್ತರು ಗಮನ ಸೆಳೆದರು. ತಂದೆಯವರಾದ ಯಡಿಯೂರಪ್ಪನವರು ಒಂದು ಮಾತನ್ನು ಹೇಳುತ್ತಿರುತ್ತಾರೆ. ಮಾತನಾಡುವುದೇ ಸಾಧನೆ ಆಗಬಾರದು; ಸಾಧನೆ ಮಾತನಾಡಬೇಕು ಎಂಬುದು ಅವರ ಕಿವಿಮಾತು. ಬೆಂಗಳೂರು ಇವರದೇ ಸಾಮ್ರಾಜ್ಯ ಎಂದು ಮೆರೆಯುತ್ತಿದ್ದರು. ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದ್ದೇವೆ. ನಾನು ಮಾತನಾಡುವ ವ್ಯಕ್ತಿಯಲ್ಲ; ಕೆಲಸ ಮಾಡಿ ತೋರಿಸುವವ ಎಂದು ನುಡಿದರು.
ಎಲ್ಲವನ್ನೂ ಪಕ್ಷದ ಹಿತಾಸಕ್ತಿಯಿಂದ ನುಂಗಿಕೊಳ್ಳುತ್ತೇನೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಮುಂದಿರುವ ಗುರಿ. ನಾನು ಆ ದಿಕ್ಕಿನಲ್ಲಿ ಹೋಗುತ್ತಿದ್ದೇನೆ ಮತ್ತು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದರು