ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳ್ಲಿ ಒಂದಾದ ಧಾರವಾಡ ಮುರುಘಾಮಠದ ರಥೋತ್ಸವವು ಸೋಮವಾರ ಸಂಜೆ ಅದ್ದೂರಿಯಾಗಿ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಶ್ರೀ ಮುರುಘೇಂದ್ರ ಮಹಾಶಿವಯೋಗಿಗಳ ರಥೋತ್ಸವನ್ನು ಏಳೆಯುವ ಮೂಲಕ ಶ್ರೀಗಳ ಕೃಪೆಗೆ ಪಾತ್ರರಾದರು.
ಸೋಮವಾರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಅನ್ನದಾಸೋಹ, ವಿದ್ಯಾದಾಸೋಹದ ಮೂಲಕ ಪ್ರಸಿದ್ಧಿ ಪಡೆದಿರುವ ಧಾರವಾಡ ಮುರುಘಾಮಠ ಜಾತ್ರೆಗೆ ಜಿಲ್ಲೆ ಸೇರಿ ಹೊರ ಜಿಲ್ಲೆ ಹಾಗೂ ಅನೇಕ ಗ್ರಾಮಗಳಿಂದಲೂ ಭಕ್ತಾದಿಗಳು ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದರು. ಬಂದ ಭಕ್ತಾದಿಗಳಿಗೆಲ್ಲ ಮುರುಘಾಮಠದ ಆವರಣದಲ್ಲಿ ಪ್ರಸಾದದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಂಜೆ 4 ಗಂಟೆ ಸುಮಾರಿಗೆ ಮುರುಘಾಮಠದಿಂದ ಮುರುಘೇಂದ್ರ ಮಹಾಶಿವಯೋಗಿಗಳ ರಥೋತ್ಸವಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.
ತೇರು ಮಠದಿಂದ ಡಿಪೊ ಸರ್ಕಲ್ವರೆಗೂ ಸಾಗಿ ಬಂತು ಅಲ್ಲಿ ಸೇರಿದ್ದ ಸಾವಿರಾರು ಭಕ್ತರು ತೇರಿಗೆ ಉತ್ತುತ್ತಿ, ಬಾಳೆಹಣ್ಣು, ನಿಂಬೆಹಣ್ಣು ತೂರಿ ಭಕ್ತಿಯ ನಮನ ಸಲ್ಲಿಸಿದರು. ಅನೇಕರು ತೇರನ್ನು ಎಳೆದು ತಮ್ಮ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಮೆ ಮಾಡಿಕೊಂಡರು. ಜಾತ್ರಾ ಮಹೋತ್ಸವದ ಅಂಗವಾಗಿ ಮುರುಘಾಮಠದಲ್ಲಿ ಪ್ರತಿನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದವು. ಇನ್ನೂ ಜಾತ್ರಾ ಮಹೋತ್ಸವದ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿತ್ತು.