ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರುತ್ತಲೇ ಇದ್ದು, ಹನಿ ನೀರಿಲ್ಲದೆ ಕೆರೆ-ಕುಂಟೆಗಳು ಬತ್ತಿ ಹೋಗುತ್ತಿವೆ. ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಕೆರೆಯಲ್ಲಿ ನೀರಿನ ಮಟ್ಟ ಕುಸಿದ ಕಾರಣ ಆಮ್ಲಜನಕದ ಕೊರತೆ ಉಂಟಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಕೆರೆಯ ದಡದಲ್ಲಿ ಮೀನುಗಳು ರಾಶಿ ರಾಶಿಯಾಗಿ ಬಿದ್ದಿದ್ದು, ಈ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.


ಕಳೆದ ಮೂರ್ನಾಲ್ಕು ವರ್ಷಗಳಿಂದ ಮೀನುಗಾರಿಕೆಯನ್ನೇ ನಂಬಿಕೊಂಡಿದ್ದ ಸ್ಥಳೀಯ ರೈತ ಶಂಕರಗೌಡ ಪಾಟೀಲ ಅವರು ಈ ಬಾರಿ ಕೆರೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮೀನುಗಳನ್ನು ಬಿಟ್ಟಿದ್ದರು. ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಲಾಭದ ನಿರೀಕ್ಷೆಯಲ್ಲಿದ್ದ ಇವರಿಗೆ ಪ್ರಕೃತಿಯ ವಿಕೋಪ ಬರಸಿಡಿಲಿನಂತೆ ಬಡಿದಿದೆ. ನೀರು ಸಂಪೂರ್ಣವಾಗಿ ಬತ್ತಿದ್ದರಿಂದ ಮೀನುಗಳು ಓಡಾಡಲು ಜಾಗವಿಲ್ಲದೆ ಉಸಿರುಗಟ್ಟಿ ಸಾವನ್ನಪ್ಪಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸಾವಿರಾರು ಮೀನುಗಳ ಸಾವಿನಿಂದಾಗಿ ಮಾಲೀಕ ಶಂಕರಗೌಡ ಪಾಟೀಲ ಆರ್ಥಿಕವಾಗಿ ಹೈರಾಣಾಗಿದ್ದಾರೆ. ಹಾಕಿದ ಬಂಡವಾಳವೂ ಕೈಗೆ ಬಾರದೆ ಸಂಕಷ್ಟಕ್ಕೆ ಸಿಲುಕಿರುವ ಅವರು, ತಮಗಾದ ನಷ್ಟವನ್ನು ಭರಿಸಲು ಸರ್ಕಾರ ಕೂಡಲೇ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೈಟ್
ಬಿಸಿಲಿನ ತೀವ್ರತೆಗೆ ಜೀವವೈವಿಧ್ಯವೇ ಅಪಾಯಕ್ಕೆ ಸಿಲುಕುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.
