ಅಥಣಿಯ ಶೈಕ್ಷಣಿಕ ಅಭಿವೃದ್ಧಿಯ ವಿಷಯವು ಇಂದು ವಿಧಾನಸಭೆಯಲ್ಲಿ ಬಿಸಿಯೇರಿದ ಚರ್ಚೆಗೆ ಕಾರಣವಾಯಿತು. ಅಥಣಿ ಕಾಲೇಜಿನಲ್ಲಿ ಮೂಲಸೌಕರ್ಯ ಹಾಗೂ ವಸತಿ ನಿಲಯದ ಕೊರತೆಯಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಂಕಷ್ಟವನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಸದನದ ಗಮನಕ್ಕೆ ತಂದರು. ಸಚಿವರು ಭರವಸೆ ನೀಡಿದ್ದರೂ ಕಾಮಗಾರಿಗಳು ವಿಳಂಬವಾಗುತ್ತಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಅಥಣಿಯ ಕಾಲೇಜಿಗೆ ಸಂಬಂಧಿಸಿದಂತೆ ಸದನದ ಗಮನ ಸೆಳೆದರು. 2 ವರ್ಷದ ಹಿಂದೆ ಬಜೆಟಿನಲ್ಲಿ 80 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಆರ್ಥಿಕ ಇಲಾಖೆಯೊಂದಿಗೆ ಸಭೆಯನ್ನು ನಡೆಸಬೇಕು. ನಾಲ್ಕನೇ ಹಂತದಲ್ಲಿ ಕಟ್ಟಡಗಳನ್ನು ಕಟ್ಟದೇ ಹೋದರೇ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಸಿಗುವುದಿಲ್ಲ. ಮೂರನೇ ವರ್ಷಕ್ಕೆ ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದಾರೆ. ನೇಮಕಾತಿಯಿಲ್ಲದೇ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುವುದು ಹೇಗೆ ಎಂದು ಪ್ರಶ್ನಿಸಿದರು. ಕಳೆದ ಬಾರಿಯೂ ವಿಚಾರವಾಗಿ ಪ್ರಶ್ನಿಸಿದಾಗ ಇದೇ ಉತ್ತರವನ್ನು ಸಚಿವರು ನೀಡಿದ್ದರು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪಶು ಸಂಗೋಪನಾ ಇಲಾಖೆಯ ಸಚಿವರಾದ ಕೆ. ವೆಂಕಟೇಶ್ ಅವರು ಅಥಣಿ ಕಾಲೇಜಿನಲ್ಲಿ ಎರಡನೇ ವರ್ಷ ಜಾರಿಯಲ್ಲಿದ್ದೂ, ಶೀಘ್ರದಲ್ಲೇ ಮೂರನೇ ವರ್ಷ ಆರಂಭಗೊಳ್ಳಲಿದೆ. ಮುಖ್ಯವಾಗಿ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಿಸಬೇಕಿದ್ದು, ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿದ್ದು, ವಸತಿ ನಿಲಯವನ್ನು ನಿರ್ಮಿಸಿಕೊಡುವುದಾಗಿ ಭರವಸೆಯನ್ನು ನೀಡಿದರು.
