ಬೆಳಗಾವಿ ತಾಲೂಕಿನ ಶಿಂದೋಳಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗುತ್ತಿದೆ. ರಥೋತ್ಸವ ಹಾಗೂ ಮಹಾಪ್ರಸಾದ ವಿನಿಯೋಗದೊಂದಿಗೆ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.

ಶಿಂದೋಳಿ ಗ್ರಾಮದ ಆರಾಧ್ಯ ದೈವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮೊನ್ನೆಯಿಂದ ಭಕ್ತಿಭಾವದೊಂದಿಗೆ ಆರಂಭಗೊಂಡಿದೆ. ಜಾತ್ರೆಯ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ಭಕ್ತಾದಿಗಳಿಗಾಗಿ ಬೃಹತ್ ಮಹಾಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರೆಯ ಕಳೆಯನ್ನು ಹೆಚ್ಚಿಸಿವೆ.
ಮಂಗಳವಾರ ಸಾಯಂಕಾಲ 5:00 ಗಂಟೆಗೆ ದೇವಸ್ಥಾನದ ಆವರಣದಲ್ಲಿ ವಿಜೃಂಭಣೆಯ ರಥೋತ್ಸವ ಜರುಗಿತು. ನೂರಾರು ಭಕ್ತರು ‘ಶ್ರೀ ರಾಮಲಿಂಗೇಶ್ವರ ಮಹಾರಾಜ್ ಕೀ ಜೈ’ ಎನ್ನುವ ಘೋಷವಾಕ್ಯಗಳೊಂದಿಗೆ ರಥವನ್ನು ಎಳೆದು ಪುನೀತರಾದರು. ಇನ್ನು ಇಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಆಂಬಿಲಿ ಗಾಡೆಗಳ (ಆಂಬಿಲಿ ಬಂಡಿ) ಮೆರವಣಿಗೆ ನಡೆಯಲಿದೆ ಎಂದು ದೇವಸ್ಥಾನದ ಪಂಚ ಕಮಿಟಿಯ ಸದಸ್ಯರು ಮಾಹಿತಿ ನೀಡಿದ್ದಾರೆ.
