ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ರಸ್ತೆಯ ಮೇಲೆ ಬೇಕಾಬಿಟ್ಟಿಯಾಗಿ ಸಾಗಿಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಯಾವುದೇ ಭದ್ರತೆಯಿಲ್ಲದೆ ದ್ವಿಚಕ್ರ ವಾಹನದಲ್ಲಿ ಪರೀಕ್ಷಾ ಕಟ್ಟುಗಳನ್ನು ಸಾಗಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿಯ ಉಮಾಭಾಯಿ ಪ್ರೌಢಶಾಲಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಇಂಗ್ಲಿಷ್ ಭಾಷಾ ಪರೀಕ್ಷೆಯ ನಂತರ ಈ ಗಂಭೀರ ಲೋಪ ನಡೆದಿದೆ. ಪರೀಕ್ಷಾ ಸಿಬ್ಬಂದಿ ಎಸ್.ಆರ್. ಬೆಳಗಲಿ ಹಾಗೂ ದರ್ಜೆ ನೌಕರರ ಬೇಜವಾಬ್ದಾರಿತನದಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಯಾವುದೇ ಪೊಲೀಸ್ ಭದ್ರತೆಯಿಲ್ಲದೆ ಕೇವಲ ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗಿದೆ. ನಿಯಮದ ಪ್ರಕಾರ ಉತ್ತರ ಪತ್ರಿಕೆಗಳನ್ನು ಅತ್ಯಂತ ಬಿಗಿ ಭದ್ರತೆಯಲ್ಲಿ ರವಾನಿಸಬೇಕಿದ್ದರೂ, ಇಲ್ಲಿನ ಸಿಬ್ಬಂದಿ ಮಾತ್ರ ಬಾಯಲ್ಲಿ ಎಲೆ ಅಡಿಕೆ ಹಾಕಿಕೊಂಡು ಸಾರ್ವಜನಿಕರ ಟೀಕೆಗೂ ಕ್ಯಾರೆ ಎನ್ನದೆ ಹಾರಿಕೆ ಉತ್ತರ ನೀಡುತ್ತಿರುವುದು ಕಂಡುಬಂದಿದೆ.
ಪ್ರಶ್ನೆ ಪತ್ರಿಕೆಗಳನ್ನು ತರುವಾಗ ತೋರುವ ಬಿಗಿ ಭದ್ರತೆ, ಪರೀಕ್ಷೆ ಮುಗಿದ ಮೇಲೆ ಉತ್ತರ ಪತ್ರಿಕೆಗಳನ್ನು ಮರಳಿಸುವಾಗ ಏಕಿಲ್ಲ? ಎಂಬುದು ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಉತ್ತರ ಪತ್ರಿಕೆಗಳನ್ನು ಅತೀ ನಿರ್ಲಕ್ಷ್ಯದಿಂದ ಸಾಗಿಸುತ್ತಿದ್ದ ದೃಶ್ಯಗಳು ಸ್ಥಳೀಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತಿವೆ. ಈ ಕೂಡಲೇ ಶಿಕ್ಷಣ ಸಚಿವರು ಮಧ್ಯಪ್ರವೇಶಿಸಿ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೋಷಕರು ಮತ್ತು ಶಿಕ್ಷಣ ಪ್ರೇಮಿಗಳು ಒತ್ತಾಯಿಸಿದ್ದಾರೆ.
