ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ 12 ಅಡಿ ಉದ್ದದ ಮೊಸಳೆಯನ್ನು ಗ್ರಾಮಸ್ಥರು ಸೆರೆ ಹಿಡಿದ ಘಟನೆ ನಡೆದಿದೆ.

ಕೃಷ್ಣಾ ನದಿ ದಡದಲ್ಲಿ ಕಾಣಿಸಿಕೊಂಡಿದ್ದ ಮೊಸಳೆ ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸ್ವಯಂ ಪ್ರೇರಿತರಾಗಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಹಿಡಿದಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನು ತಮ್ಮ ವಶಕ್ಕೆ ಪಡೆದು, ಬಳಿಕ ಹಿಡಕಲ್ ಜಲಾಶಯದ ನೀರಿಗೆ ಬಿಡುವ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
