• ಬೆಳಗಾವಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯಾಗಾರ
• ಸುವರ್ಣ ವಿಧಾನಸೌಧದಲ್ಲಿ ವಿಭಾಗ ಮಟ್ಟದ ತರಬೇತಿ ಆರಂಭ
• ಅರ್ಹ ಮತದಾರರನ್ನು ಕೈಬಿಟ್ಟರೆ ಕಠಿಣ ಕ್ರಮ: ಚುನಾವಣಾಧಿಕಾರಿ ಎಚ್ಚರಿಕೆ
• ಜೂನ್ 20 ರಿಂದ ಮನೆ ಮನೆ ಸಮೀಕ್ಷೆ ಆರಂಭ

ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ನಲ್ಲಿ ಮತದಾರರ ಪಟ್ಟಿಯ ತೀವ್ರ ಸಮಗ್ರ ಪರಿಷ್ಕರಣೆ (SIR) ಕುರಿತು ವಿಭಾಗ ಮಟ್ಟದ ಮಹತ್ವದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಯಾವುದೇ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, “ಮತದಾನವು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಚಾಚೂ ತಪ್ಪದೆ ಪಾಲಿಸಬೇಕು” ಎಂದರು. ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಬಹು ನೋಂದಣಿಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಇನ್ನುಳಿದ ಬಾಕಿ ಮ್ಯಾಪಿಂಗ್ ಮತ್ತು ಪಟ್ಟಿಯಿಂದ ಕೈಬಿಟ್ಟು ಹೋಗಿರುವ ಅರ್ಹ ವ್ಯಕ್ತಿಗಳನ್ನು ತಕ್ಷಣವೇ ಸಮೀಕ್ಷೆಯ ಮೂಲಕ ಸೇರ್ಪಡೆಗೊಳಿಸಲು ಆದೇಶಿಸಿದರು. ಅಲ್ಲದೆ, ಮತದಾರರ ನೋಂದಣಾಧಿಕಾರಿಗಳು ಪ್ರತಿ ಮತಗಟ್ಟೆಗೆ ಬಿಎಲ್ಒ (BLO) ಹಾಗೂ ಸೂಪರ್ವೈಸರ್ಗಳ ನೇಮಕಾತಿಯನ್ನು ಖಾತ್ರಿಪಡಿಸಿಕೊಂಡು, ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲು ಪ್ರಕ್ರಿಯೆ ಆರಂಭಿಸಬೇಕು ಎಂದು ಪೂರ್ವಸಿದ್ಧತೆಯ ಜವಾಬ್ದಾರಿಗಳನ್ನು ವಿವರಿಸಿದರು.

ಜಂಟಿ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ಅಧಿಕಾರಿಗಳಿಗೆ ತರಬೇತಿ ನೀಡಿ, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ದೋಷರಹಿತ ಪಟ್ಟಿ ಸಿದ್ಧಪಡಿಸಲು ಸೂಚಿಸಿದರು. ಈ ಹಿಂದೆ ಚುನಾವಣಾ ನಿಯಮ ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಿರುವ ಉದಾಹರಣೆಗಳಿದ್ದು, ಪ್ರತಿಯೊಬ್ಬರೂ ಜಾಗರೂಕರಾಗಿ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು. ಕಾರ್ಯಾಗಾರದಲ್ಲಿ ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಮೃತ ಮತ್ತು ನಕಲಿ ಮತದಾರರ ಹೆಸರುಗಳನ್ನು ಕೈಬಿಡುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೇರಿದಂತೆ ವಿಭಾಗದ ಎಲ್ಲಾ ಅಪರ ಜಿಲ್ಲಾಧಿಕಾರಿಗಳು, ಚುನಾವಣಾ ತಹಶೀಲ್ದಾರರು ಹಾಗೂ ತಾಂತ್ರಿಕ ಪ್ರೋಗ್ರಾಮರ್ಗಳು ಉಪಸ್ಥಿತರಿದ್ದರು.
