ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎನ್ನುವ ಹೋರಾಟ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತರು, ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕೃತಿ ದಹಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಹೈಡ್ರಾಮಾ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಜಂಟಿ ಪಾಲಿಕೆಯಿಂದ ಧಾರವಾಡವನ್ನು ಮುಕ್ತಗೊಳಿಸಿ, ಪ್ರತ್ಯೇಕ ಪಾಲಿಕೆ ರಚಿಸಬೇಕೆಂಬ ಹೋರಾಟಕ್ಕೆ ಬೆಂಬಲ ಸೂಚಿಸಿ ಬಿಜೆಪಿ ಕಾರ್ಯಕರ್ತರು ನಗರದ ಜುಬ್ಲಿ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಜುಬ್ಲಿ ಸರ್ಕಲ್ ರಸ್ತೆ ತಡೆದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಪ್ರತಿಕೃತಿ ದಹನಕ್ಕೆ ಮುಂದಾದರು. ಈ ವೇಳೆ ರಂಗಪ್ರವೇಶ ಮಾಡಿದ ಪೊಲೀಸರು ಪ್ರತಿಕೃತಿ ದಹಿಸಲು ಅವಕಾಶ ನೀಡದೆ, ತಕ್ಷಣವೇ ಅದರ ಮೇಲೆ ನೀರು ಸುರಿದು ಆಪರೇಷನ್ ತಡೆದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರ ವಿರುದ್ಧವೇ ತೀವ್ರ ಧಿಕ್ಕಾರ ಕೂಗಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

