ಮುಂಬರುವ ತಂತ್ರಜ್ಞಾನ ಆಧಾರಿತ ಉದ್ಯೋಗಗಳಿಗೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಬೆಳಗಾವಿಯ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಕೋಡಿಂಗ್ ಪುಸ್ತಕಗಳನ್ನು ವಿತರಿಸಲಾಯಿತು. ಚಾಣಕ್ಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯ ನೇತೃತ್ವದಲ್ಲಿ ಈ ಡಿಜಿಟಲ್ ಸಾಕ್ಷರತಾ ಅಭಿಯಾನ ಯಶಸ್ವಿಯಾಗಿ ಜರುಗಿದೆ.


ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವು ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ರಾಜಶೇಖರ್, ಶಿಕ್ಷಕ ವೃಂದ ಹಾಗೂ ಚಾಣಕ್ಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಈ ಉದಾತ್ತ ಕಾರ್ಯಕ್ಕೆ ಮಲ್ಲೇಶ್ ಚೌಗಲೆ, ಲಿಂಗರಾಜ್ ಪಾಟೀಲ್, ಚೇತನ್ ಹಿರೇಮಠ, ಅನಿತಾ ಅಸುಕರ್ ಸೇರಿದಂತೆ ಹಲವು ಪ್ರಮುಖರು ಸಾಥ್ ನೀಡಿದರು. ದತ್ತಾಂಶ ಎಡ್ಟೆಕ್ ಸಂಸ್ಥೆಯ ರೇಖಾ ಗುರವಗೋಳ ಅವರು ಪುಸ್ತಕಗಳ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಭವಿಷ್ಯದ ಡಿಜಿಟಲ್ ಯುಗಕ್ಕೆ ಸರ್ಕಾರಿ ಶಾಲಾ ಮಕ್ಕಳನ್ನು ಸಿದ್ಧಪಡಿಸುವ ಈ ಮಹತ್ವಾಕಾಂಕ್ಷಿ ಹೆಜ್ಜೆಗೆ ಶಾಲಾ ಆಡಳಿತ ಮಂಡಳಿಯು ಶ್ಲಾಘನೆ ವ್ಯಕ್ತಪಡಿಸಿ, ಸಂಸ್ಥೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

