ಖಾನಾಪುರ ತಾಲೂಕು ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದು, ಮುಂಬರುವ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರಮುಖ ಸಭೆಗೆ ಗೈರಾದ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ತಕ್ಷಣವೇ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ.

ಖಾನಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅತಿವೃಷ್ಟಿ ಮುನ್ನೆಚ್ಚರಿಕೆ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ (ಸಿಎಒ) ಪರಶುರಾಮ್ ದುಡಗುಂಟಿ ವಹಿಸಿದ್ದರು. ವೇದಿಕೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮೇತ್ರಿ ಉಪಸ್ಥಿತರಿದ್ದರು. ಸಭೆಗೆ ಬಿಇಒ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಡಕ್ ಎಚ್ಚರಿಕೆ ನೀಡಿದ ಸಿಎಒ, ಅತಿವೃಷ್ಟಿ ಸಮಯದಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು 24 ಗಂಟೆಯೂ ಕರ್ತವ್ಯ ನಿರ್ವಹಿಸಬೇಕು. ಯಾವುದೇ ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿ ವರ್ಷ ಮಲಪ್ರಭಾ ಸೇರಿದಂತೆ ಇತರೆ ನದಿಗಳ ಪ್ರವಾಹದಿಂದ ತಾಲೂಕಿನಲ್ಲಿ ಭಾರಿ ನಷ್ಟ ಉಂಟಾಗುತ್ತಿದ್ದು, ಹೆಸ್ಕಾಂ, ಆರೋಗ್ಯ, ಶಿಕ್ಷಣ ಮತ್ತು ಪಶುಸಂಗೋಪನೆ ಇಲಾಖೆಗಳು ಮೊದಲೇ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು. ಕುಡಿಯುವ ನೀರು, ರಸ್ತೆಗಳು, ಶಿಥಿಲಗೊಂಡ ಶಾಲಾ ಕೊಠಡಿಗಳು ಹಾಗೂ ವಿದ್ಯುತ್ ಕಂಬಗಳ ದುರಸ್ತಿಗೆ ಆದ್ಯತೆ ನೀಡಲು ತಿಳಿಸಲಾಯಿತು. ಇನ್ನು ಪ್ರತಿ ವರ್ಷ ಅತಿವೃಷ್ಟಿ ಪೂರ್ವಭಾವಿ ಸಭೆಗೆ ಮಾಧ್ಯಮಗಳಿಗೆ ಆಮಂತ್ರಣ ನೀಡಲಾಗುತ್ತಿತ್ತು, ಆದರೆ ಈ ಬಾರಿ ತಾಲೂಕು ಆಡಳಿತ ಪತ್ರಕರ್ತರಿಗೆ ಮಾಹಿತಿ ನೀಡಲು ಮರೆತಿದ್ದರಿಂದ ಸಭೆಯಲ್ಲಿ ಯಾವುದೇ ಪತ್ರಕರ್ತರು ಉಪಸ್ಥಿತರಿರಲಿಲ್ಲ. ಸಭೆಯಲ್ಲಿ ಅಧಿಕಾರಿಗಳಾದ ಡಾ. ಮನೋಹರ್ ದಾದ್ಮಿ, ಡಾ. ಮಹೇಶ್ ಕಿವಿಡಸನವರ್, ಪ್ರವೀಣ್ ಬರ್ ಗಾಲೆ ಹಾಗೂ 51 ಗ್ರಾಮ ಪಂಚಾಯತಿಗಳ ಪಿಡಿಒಗಳು ಮಾತ್ರ ಭಾಗವಹಿಸಿದ್ದರು.
