ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬನೇ ಸ್ವಂತ ಪತ್ನಿಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ಈ ದುರಂತ ಸಂಭವಿಸಿದ್ದು, 50 ವರ್ಷದ ಪ್ರಭಾವತಿ ಕೊಲೆಯಾದ ದುರ್ದೈವಿಯಾಗಿದ್ದಾರೆ. ಕೌಟುಂಬಿಕ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ರಾಮಮೂರ್ತಿ (55) ಎಂಬಾತನೇ ಪತ್ನಿಯ ಕತ್ತು ಕೊಯ್ದು ಕ್ರೂರವಾಗಿ ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ವಿಜಯನಗರ ಎಸ್ಪಿ ಎಸ್. ಜಾಹ್ನವಿ, ಅಡಿಷನಲ್ ಎಸ್ಪಿ ಮಂಜುನಾಥ್ ಹಾಗೂ ಡಿಎಸ್ಪಿ ಮುರುಳಿಧರ್ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೈದ ಬಳಿಕ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ರಾಮಮೂರ್ತಿಯನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಚುರುಕಿನಿಂದ ಸಾಗಿದೆ.
