ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಆರು ಮಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದಡಿ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಸೋಮೇಶ ಗೆಜ್ಜೆ ಅವರನ್ನು ಅಮಾನತು ಗೊಳಿಸಲಾಗಿದೆ.

ಘಟನೆಗೆ ಮುನ್ನವೇ ಗೋವಿಂದಪುರ ಗ್ರಾಮದ ‘ನಿರಾಳೆ’ ಮತ್ತು ‘ಪಾಟೀಲ್’ ಕುಟುಂಬಗಳ ನಡುವೆ ತೀವ್ರ ವೈಮನಸ್ಸು ಉಂಟಾಗಿದ್ದು, ಎರಡೂ ಕುಟುಂಬಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದವು. ಪರಿಸ್ಥಿತಿ ಉದ್ವಿಗ್ನವಾಗಿರುವ ಬಗ್ಗೆ ಮಾಹಿತಿ ಇದ್ದರೂ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಶಾಂತಿ ಸುವ್ಯವಸ್ಥೆ ಕಾಪಾಡುವುದು ಹಾಗೂ ಉಭಯ ಕುಟುಂಬಗಳ ನಡುವಿನ ಕಲಹವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಆರೋಪದಡಿ ಪಿಎಸ್ಐ ಸೋಮೇಶ ಗೆಜ್ಜೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಇದೇ ವೇಳೆ, ಗೋವಿಂದಪುರದಲ್ಲಿ ನಡೆದ ಆರು ಮಂದಿ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಪ್ರಕರಣದ ಎಲ್ಲ ಆಯಾಮಗಳ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ.
