ನೆರೆರಾಜ್ಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಶುರುವಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಸದ್ಯ 78 ಸಾವಿರ ಕ್ಯೂಸೆಕ್ನಷ್ಟು ಒಳಹರಿವು ದಾಖಲಾಗಿದೆ.


ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು, ಕೇವಲ ಇಂದೊಂದೇ ದಿನದಲ್ಲಿ ನದಿಯ ನೀರಿನ ಮಟ್ಟ ಬರೋಬ್ಬರಿ 5 ಅಡಿಯಷ್ಟು ಏರಿಕೆಯಾಗಿದೆ.ನದಿಗೆ ನೀರು ಹೆಚ್ಚಿನ ಹರಿಯುವುದರಿಂದ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ನದಿಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾದ ಕಾರಣ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಒಟ್ಟು 7 ಕೆಳಹಂತದ ಪ್ರಮುಖ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಇದರಿಂದಾಗಿ ಹಲವು ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತಾಗಿದೆ.
ಯಡೂರ – ಕಲ್ಲೋಳ,ಮಾಂಜರಿ – ಸೌಂದತ್ತಿ, ಕಾರದಗಾ – ಭೋಜ,ಮಲಿಕವಾಡ – ದತ್ತವಾಡ,ಸಿದ್ನಾಳ – ಅಕ್ಕೋಳ,
ಮಮದಾಪೂರ – ಹುನ್ನರಗಿ,ಬಾರವಾಡ – ಕುನ್ನೂರ ಸೇತುವೆಗಳು ಜಲಾವೃತಗೊಂಡಿವೆ.
ಸೇತುವೆಗಳು ಮುಳುಗಡೆಯಾಗಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ತಾಲೂಕು ಆಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ
