ಖಾನಾಪೂರ ತಾಲೂಕಿನ ಹೊನಕಲ್ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಶೋಭಾ ಮಾದಾರ ಎಂಬ ಮಹಿಳೆಯ ಮೇಲೆ ಕೊಯ್ತಾದಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಭೀಕರ ಘಟನೆ ಸಂಭವಿಸಿದೆ. ಸದ್ಯ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಖಾನಾಪೂರದ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುವಾಗ ಕೊಯ್ತಾದಿಂದ ಭೀಕರವಾಗಿ ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿರುವ ಶೋಭಾ ಮಾದಾರ ಅವರನ್ನು ಖಾನಾಪೂರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಮಾದಾರ ಹಾಗೂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರು ಮತ್ತು ಬಾರ್ ಅಸೋಸಿಯೇಶನ್ ಅಧ್ಯಕ್ಷರಾದ ನ್ಯಾಯವಾದಿ ಈಶ್ವರ ಘಾಡಿ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಆತ್ಮಸ್ಥೈರ್ಯ ತುಂಬಿದ ನಾಯಕರು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಗರಿಷ್ಠ ಸರ್ಕಾರಿ ನೆರವು ಹಾಗೂ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಸಂಪರ್ಕಿಸಿದ ನಾಯಕರು, ಗಾಯದ ತೀವ್ರತೆ ಹಾಗೂ ಮಹಿಳೆಯ ಸದ್ಯದ ಆರೋಗ್ಯ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆಗೆ ಮನವಿ ಮಾಡಿದರು.
*- ಅಲ್ತಾಫ್ ಎಂ ಬಸರೀಕಟ್ಟಿ, ಇನ್ ನ್ಯೂಸ್ ಖಾನಾಪೂರ.*
