ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪತ್ರ ನೀಡಲಾಗುತ್ತಿದೆ ಎಂಬ ಬಿಜೆಪಿ ನಾಯಕರ ಟೀಕೆಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ನಿಜವಾಗಿಯೂ ಇಲ್ಲಿನ ನಿವಾಸಿಗಳಾಗಿದ್ದಾರೋ, ಅವರಿಗೆ ಮಾತ್ರ ನಿಯಮಾನುಸಾರ ಶಾಶ್ವತ ನಿವಾಸಿ ಪತ್ರ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯದಲ್ಲಿ ರಾಜಕೀಯ ಟೀಕೆಗಳಿಗೆ ಯಾವುದೇ ಆಧಾರವಿಲ್ಲ ಎಂದರು.
ಅಕ್ರಮ ವಲಸಿಗರಿಗೆ ಸುಮ್ಮನೆ ಶಾಶ್ವತ ನಿವಾಸಿ ಪತ್ರ ನೀಡಲು ಬರುವುದಿಲ್ಲ. ಅರ್ಜಿ ಸಲ್ಲಿಸಿದವರು ಎಷ್ಟು ದಿನಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಡ್ಡಾಯವಾಗಿ ದಾಖಲೆಗಳ ಮೂಲಕ ಪರಿಶೀಲಿಸಬೇಕಾಗುತ್ತದೆ. ಸೂಕ್ತ ದಾಖಲಾತಿಗಳು ಇದ್ದರೆ ಮಾತ್ರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಸಚಿವರು, ಯಾರು ಇಲ್ಲಿನ ನಿವಾಸಿಗಳಲ್ಲ ಮತ್ತು ಯಾರ ಬಳಿ ಅಕ್ರಮ ದಾಖಲೆಗಳಿವೆ ಎಂಬುದಕ್ಕೆ ನಿರ್ದಿಷ್ಟ ಪುರಾವೆಗಳಿದ್ದರೆ ಅದನ್ನು ನೀಡಲಿ. ಅನರ್ಹರನ್ನು ಪತ್ತೆಹಚ್ಚಲು ಮತ್ತು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮಲ್ಲಿ ಕಟ್ಟುನಿಟ್ಟಾದ ಕಾನೂನುಗಳಿವೆ. ಕಾನೂನಿನ ಚೌಕಟ್ಟನ್ನು ಮೀರಿ ಯಾರೊಬ್ಬರಿಗೂ ಸೌಲಭ್ಯ ನೀಡುವುದಿಲ್ಲ ಎಂದು ತಿಳಿಸಿದರು.
