Belagavi

ದೇಗುಲಗಳ ಕಳ್ಳತನ ಪ್ರಕರಣ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ಅಪ್ರಾಪ್ತ ಸೇರಿ 5 ಆರೋಪಿಗಳ ಬಂಧನ, ₹25.89 ಲಕ್ಷ ಮೌಲ್ಯದ ಸ್ವತ್ತು ವಶ!

Share

ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಖದೀಮರ ಗ್ಯಾಂಗ್ ಒಂದನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಕೆ. ರಾಮರಾಜನ್ ಅವರು ತಿಳಿಸಿದರು.

ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ತೋಟದ ಜಮೀನಿನಲ್ಲಿದ್ದ ಶ್ರೀ ರಾಣಮ್ಮಾ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಬಂಗಾರದ ಮಂಗಳಸೂತ್ರ ಮತ್ತು ಬೆಳ್ಳಿಯ ಒಡವೆಗಳ ಕಳ್ಳತನ ಪ್ರಕರಣವನ್ನು ಹಾರೂಗೇರಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ರಚನೆಯಾಗಿದ್ದ ವಿಶೇಷ ತನಿಖಾ ತಂಡವು, ಅಡಳಹಟ್ಟಿ ಗ್ರಾಮದ ನಿವಾಸಿಗಳಾದ ವಿಜಯ ಭೀಮಪ್ಪ ಗುಡದಿನ್ನಿ, ಕಲ್ಮೇಶ್ ಅಲ್ಲಪ್ಪ ಮೂರಾಬಟ್ಟಿ, ಶಿವಾನಂದ ವಿಠಲ ಚಿಕ್ಕಟ್ಟಿ ಮತ್ತು ಸಂಗಮೇಶ ಶಂಕರ ಐನಾಪೂರ ಎಂಬ ನಾಲ್ವರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳು ಕೇವಲ ಹಾರೂಗೇರಿ ಮಾತ್ರವಲ್ಲದೆ ಅಥಣಿ, ಕಾಗವಾಡ ಹಾಗೂ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನಗಳಲ್ಲೂ ಕಳ್ಳತನ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಬಂಧಿತ ಆರೋಪಿಗಳಿಂದ ಪೊಲೀಸರು 1.30 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು, 18.23 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 760 ಗ್ರಾಂ ಬೆಳ್ಳಿ ಆಭರಣಗಳು, 29 ಕೆಜಿಗೂ ಹೆಚ್ಚು ಕಂಚಿನ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ 6 ಲಕ್ಷ ರೂಪಾಯಿ ಮೌಲ್ಯದ ಮಹೀಂದ್ರಾ ಪಿಕ್ ಅಪ್ ವಾಹನ ಸೇರಿದಂತೆ ಒಟ್ಟು ₹25,89,295/- ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ದೇವಸ್ಥಾನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರೂಗೇರಿ ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 25.89 ಲಕ್ಷ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಕಂಚು ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ತನಿಖಾ ತಂಡದ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಿದ್ದಾರೆ.

Tags:

error: Content is protected !!